ಗರ್ಭಿಣಿ ಮಹಿಳೆಯರ ತಪಾಸಣೆ ನಿರ್ಲ್ಯಕ್ಷಿಸದಿರಿ

2 years ago

ಶಿಶು ಹಾಗೂ ತಾಯಿ ಮರಣ ಕುರಿತ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ

ಬಳ್ಳಾರಿ: ಗರ್ಭಿಣಿ ಮಹಿಳೆಯರ ಮತ್ತು ನವಜಾತ ಶಿಶುವಿಗೆ ಮಾಡಿಸಬೇಕಾದ ತಪಾಸಣೆಗಳನ್ನು ನಿರ್ಲ್ಯಕ್ಷಿಸುವಂತಿಲ್ಲ. ಶಿಶು ಮರಣ ಹಾಗೂ ತಾಯಿ ಮರಣ ತಡೆಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶಬಾಬು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿಶು ಹಾಗೂ ತಾಯಿ ಮರಣ ಕುರಿತ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮನೆ ಭೇಟಿಯ ಮೂಲಕ ಕುಟುಂಬದ ಸದಸ್ಯರಿಗೆ ಅವರ ವೈಯಕ್ತಿಕ ಕೆಲಸಗಳ ಕಾರಣದಿಂದ ತಪಾಸಣೆಗೆ ವಿಳಂಬ ಮಾಡದಂತೆ ಮನವೊಲಿಸುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು.

ಗಂಡಾಂತರ ಗರ್ಭಿಣಿಯರು ಎಂದು ಗುರುತಿಸಿದ ನಂತರ ನಿರಂತರ ನಿಗಾವಣೆ ಕೈಗೊಳ್ಳಬೇಕು. ರಕ್ತದೊತ್ತಡ ಪರೀಕ್ಷೆಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಶೀಲಿಸಿ ಅಗತ್ಯವೆನಿಸಿದಲ್ಲಿ ತಜ್ಞ ವೈದ್ಯರ ಬಳಿ ತಕ್ಷಣವೇ ಕಳುಹಿಸಬೇಕು ಎಂದರು.

ರಕ್ತಹೀನತೆ ಕಂಡುಬಂದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆಯಿಂದ (ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ) ಸುಧಾರಣೆಯಾಗದಿದ್ದಲ್ಲಿ ತಜ್ಞರ ಬಳಿ ಕಳುಹಿಸಬೇಕು. ಅಗತ್ಯವಿದ್ದಲ್ಲಿ ಸ್ಕಾö್ಯನ್ ಮಾಡಿಸಲು  ಸೂಚಿಸಬೇಕು ಎಂದರು.

ಮೊದಲ ಹೆರಿಗೆ ಶಸ್ತೃಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಠ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ್-ಟಿ, ನಿರೋಧ್ ಕುರಿತು ಸಮುದಾಯದಲ್ಲಿ ಆರೋಗ್ಯ ಶಿಕ್ಷಣ ನೀಡಬೇಕು. ಅತಿ ಮುಖ್ಯವಾಗಿ ಗರ್ಭಿಣಿಗೆ ಮೇಲ್ಮಟ್ಟದ ಆಸ್ಪತ್ರೆಗೆ ಶಿಫಾರಸ್ಸು ಮಾಡುವಾಗ 108 ಆರೋಗ್ಯ ಕವಚ ಬರುವ ಸಮಯ ತಡವಾಗುವ ಸಂದರ್ಭದಲ್ಲಿ ತಕ್ಷಣವೇ ವೈದ್ಯಾಧಿಕಾರಿಗಳು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದರು.

ಹೆರಿಗೆ ವಿಷಯವನ್ನು ಆದ್ಯತೆಯಾಗಿಟ್ಟುಕೊಂಡು ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಮನ್ವಯ ಸಭೆ ಕೈಗೊಳ್ಳಬೇಕು. ತಮ್ಮ ವ್ಯಾಪ್ತಿಯ ಗರ್ಭಿಣಿಯರ ಆರೈಕೆ ಕುರಿತು ನಿಗಾವಹಿಸಲು ಕ್ರಮವಹಿಸಬೇಕು ಎಂದರು.

ವಿಮ್ಸ್ ಪ್ರಸೂತಿ ವಿಭಾಗದ ಮುಖಸ್ಥರಾದ ಡಾ.ಆಶಾರಾಣಿ ಮಾತನಾಡಿ, ವೈದ್ಯಾಧಿಕಾರಿಗಳು ತಮ್ಮ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಗಂಡಾಂತರ ಗರ್ಭಿಣಿಯರ ಮನೆ ಭೇಟಿ ಹಾಗೂ ಆರೋಗ್ಯದ ಸ್ಥಿತಿ ಕುರಿತು ಪ್ರತಿವಾರ ಚರ್ಚಿಸಲು ಆದ್ಯತೆಯಾಗಬೇಕು ಎಂದರು.

ಗರ್ಭಿಣಿಯರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದರೆ, ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸೂಚಿಸಬೇಕು ಎಂದರು.

ಆಕಸ್ಮಿಕ ಘಟನೆಗಳಲ್ಲಿ ಗರ್ಭಿಣಿಯರ ಆರೈಕೆಗೆ ಯಾರೂ ಇಲ್ಲದಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ತಿಳಿಸಿ ಆರೈಕೆ ಕೇಂದ್ರಕ್ಕೆ ಕಳುಹಿಸಲು ವ್ಯವಸ್ಥೆ ಒದಗಿಸಬೇಕು ಎಂದರು.

ಸಭೆಯಲ್ಲಿ ವಿಮ್ಸ್ ಪ್ರಸೂತಿ ತಜ್ಞೆ ಡಾ.ಆಶಾರಾಣಿ, ವಿಮ್ಸ್ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಸ್ಪತ್ರೆ ಪ್ರಸೂತಿ ತಜ್ಞ ಡಾ.ಅಶ್ರಫ್ ಅಲಿ, ಮಕ್ಕಳ ತಜ್ಞ ಡಾ.ಬಾಲು ವೆಂಕಟೇಶಲು, ವಿಮ್ಸ್ ಎಸ್‌ಎನ್‌ಸಿಯು ನೋಡಲ್ ಅಧಿಕಾರಿ ಡಾ.ರಾಜೇಶ್.ಡಿ ಸೇರಿದಂತೆ ಡಾ.ಈರಣ್ಣ, ಡಾ.ಮಂಜುನಾಥ ಜವಳಿ, ಡಾ.ಅರುಣಕುಮಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡಿಎನ್‌ಓ ಗಿರೀಶ್ ಹಾಗೂ ವೈದ್ಯಾಧಿಕಾರಿಗಳು, ಪಿಹೆಚ್‌ಸಿಓ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Leave a Reply