ಹಕ್ಕಿಜ್ವರದ ಬಗ್ಗೆ ಭಯ ಬೇಡ ಎಚ್ಚರವಿರಲಿ: ಪ್ರಶಾಂತ್ ಕುಮಾರ್ ಮಿಶ್ರಾ

1 year ago

ಬಳ್ಳಾರಿ: ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನ ಇಲಾಖೆ, ಬಿಎಮ್‌ಆರ್‌ಸಿ, ಮಹಾನಗರ ಪಾಲಿಕೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಮಾಹಿತಿ ಶಿಕ್ಷಣ ಸಂವಹನ ವಿಭಾಗದ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಹಕ್ಕಿಜ್ವರ ಕುರಿತು ಸೇರಿದಂತೆ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಕ್ಕಿ ಜ್ವರವು (ಹಕ್ಕಿಗಳಿಗೆ ಸಂಬಂಧಿಸಿದ) ವೈರಾಣುಗಳಿಂದ (ವೈರಸ್) ಉಂಟಾಗಿದ್ದು, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ. ಸೋಂಕು ತಗುಲಿದ ಕೋಳಿ ಮರಿಗಳ ಪುಕ್ಕಗಳನ್ನು ತರಿಯುವ ಮತ್ತು ವಧೆಗೈಯುವ ಕಾರ್ಯಗಳಲ್ಲಿ ನಿರತರಾದ ವಯಸ್ಕರಲ್ಲಿ ಹೆಚ್ಚಾಗಿ ಈ ಸೋಂಕು ಸಂಭವಿಸುತ್ತದೆ ಎಂದರು.

ಸೋಂಕು ತಗಲಿದ ಅಥವಾ ಸಾಯುವ ಹಂತದಲ್ಲಿರುವ ಕೋಳಿಗಳಿರುವ ವಾತಾವರಣದಲ್ಲಿ ಕ್ರೀಡಾನಿರತರಾದ ಮಕ್ಕಳಿಗೂ ಈ ಸೋಂಕು ಹರಡುತ್ತದೆ. ಈ ಹಿನ್ನೆಲೆಯಲ್ಲಿ ಜನತೆಗೆ ಜಾಗೃತಿ ನೀಡುವ ಮೂಲಕ ಸೋಂಕು ಹರಡದಂತೆ ಕ್ರಮವಹಿಸಲು ಸೂಚಿಸಿದರು.

ಮುನ್ನೆಚ್ಚರಿಕೆ ಕ್ರಮಗಳು: ಹಕ್ಕಿಗಳ ಅಸಹಜ ಸಾವು ಕಂಡಬಂದಲ್ಲಿ ತಕ್ಷಣ ಪಶು ಇಲಾಖೆಗೆ ತಿಳಿಸಬೇಕು. ವ್ಯಾಧಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು.

ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು, ಕೊಲ್ಲಬಾರದು ಅಥವಾ ಕೈಯಿಂದ ಮುಟ್ಟಬಾರದು.

ಹಕ್ಕಿಗಳು ವೈರಾಣು ಸೋಂಕನ್ನು ಹೊಂದಿರಬಹುದಾಗಿರುವುದರಿಂದ ಮಕ್ಕಳನ್ನು ಅಂತಹ ಹಕ್ಕಿಗಳನ್ನು ಸ್ಪರ್ಶಮಾಡುವುದಕ್ಕಾಗಲಿ ಅಥವಾ ಅವುಗಳೊಂದಿಗೆ ಆಟ ಆಡುವುದಕ್ಕಾಲಿ ಅಥವಾ ಸಾಗಿಸುವುದಕ್ಕಾಗಲಿ ಬಿಡಬಾರದು.

ಹಕ್ಕಿ ಜ್ವರ ತಲೆದೂರಿರುವ ಪ್ರದೇಶದಲ್ಲಿ ನೀವು ವಾಸಿಸುತ್ತಿರುವುವರಾದರೆ ಎಲ್ಲಿ ಜೀವಂತ ಹಕ್ಕಿಗಳನ್ನು ಮಾರುತ್ತಾರೋ ಅಥವಾ ಮಾಂಸಕ್ಕಾಗಿ ವಧಿಸುತ್ತಾರೋ ಅಂತಹ ಸ್ಥಳಗಳಿಗೆ ನೀವು ಹೋಗಬೇಡಿ ಕೋಳಿಗಳ ಯಾವುದೇ ವಿಸರ್ಜನೆಗಳನ್ನು ಗೊಬ್ಬರವನ್ನಾಗಿ ಉಪಯೋಗಿಸಬಾರದು.

ಮುಂಜಾಗೃತಾ ಕ್ರಮ ಮಾಡಬೇಕಾಗಿರುವುದು: ಹಕ್ಕಿಗಳನ್ನು ಕೈಯಿಂದ ಮುಟ್ಟಿದ ನಂತರ ಕೈಗಳನ್ನು ಸಾಬೂನಿಂದ ಮತ್ತು ನೀರಿನಿಂದ ತೊಳೆದುಕೋಳ್ಳಬೇಕು.

ಕೋಳಿ ಮರಿಗಳನ್ನು ಕೈಗಳಿಂದ ಮುಟ್ಟುವಾಗ ಮೂಗು ಮತ್ತು ಬಾಯಿಗೆ ದಪ್ಪ ಬಟ್ಟೆಯ ಮುಸುಕು ಹಾಕಿಕೊಳ್ಳಿ. ಹಕ್ಕಿಗಳನ್ನು ಮುಟ್ಟಿದ ನಂತರ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಉಜ್ಜಿಕೊಳ್ಳದಂತೆ ಎಚ್ಚರವಹಿಸಿ. ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ತಿನ್ನಲು ಚೆನ್ನಾಗಿ ಬೇಯಿಸಿ ಸೇವಿಸಬೇಕು.

ಮುಂಜಾಗೃತಾ ಕ್ರಮವಾಗಿ ಎಲ್ಲ ಕೋಳಿ ಸಾಕಾಣಿಕೆ ಫೌಲ್ಟ್ರಿಗಳಲ್ಲಿ ನಿಗಾವಹಿಸುವಂತೆ ಪಶು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕೋಳಿ ಸಾಕಾಣಿಕೆ ಫೌಲ್ಟ್ರಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೈಯಕ್ತಿಕ ಕಾಳಜಿವಹಿಸುವ ಕುರಿತು ಜಾಗೃತಿ ನೀಡಲು ಅಗತ್ಯವೆನಿಸಿದಲ್ಲಿ ಚಿಕಿತ್ಸೆಗೆ ಯಾವುದೆ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಸಹಕಾರ ಪಡೆಯುವಂತೆ ತಿಳಿಸಿದರು.

ಇದೇ ವೇಳೆ ಹಕ್ಕಿಜ್ವರದ ಜಾಗೃತಿ ಕುರಿತು ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಯಲ್ಲಾ ರಮೇಶಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಎನ್.ಬಸರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ವಿನೋದಕುಮಾರ, ಬಿಮ್ಸ್ ನ ಮೈಕ್ರೋಬಯಾಲಜಿ ವಿಭಾಗದ ಡಾ. ಕೃಷ್ಣ, ವೈದ್ಯಕೀಯ ಅಧಿಕ್ಷಕಿ ಡಾ.ಇಂದುಮತಿ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಉಪವಲಯ ಅರಣ್ಯಾಧಿಕಾರಿ ಸುನೀಲ್‌ಕುಮಾರ, ಪಶು ಇಲಾಖೆ ಸಹಾಯಕ ನಿರ್ದೇಶಕರಾದ ಡಾ.ಕೆ.ಆರ್ ಶ್ರೀನಿವಾಸ, ಡಾ.ವಲಿಭಾಷಾ, ಜಿಲ್ಲಾ ಆರೋಗ್ಯಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಸರ್ವೇಕ್ಷಣಾ ವಿಭಾಗದ ಸಿಬ್ಬಂದಿ ಹಾಜರಿದ್ದರು.

Leave a Reply