ಜನಸಾಮಾನ್ಯರು ಪದೇಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ: ಮಂಕಾಳ ವೈದ್ಯ

11 months ago

ಕಾರವಾರ: ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ ಎಂದು ಮೀನುಗಾರಿಕೆ, ಬಂದುರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ ನ ಕಮಲಾವತಿ ಶ್ಯಾನಭೋಗ ಸಭಾ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ, ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಮಂಜೂರು ಮಾಡಬೇಕು. ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ಅವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಾನು ಕೂಡಾ ಕಾರ್ಯನಿರ್ವಹಿಸುತ್ತೇನೆ ಎಂದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಪರಿಹಾರಕ್ಕಾಗಿ ಕಚೇರಿಗಳಿಗೆ ಬಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣ ಸ್ಪಂದಿಸಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜನ ಸ್ಪಂದನ ಕಾರ್ಯಕ್ರಮ ಕೇವಲ ಕಾಟಾಚಾರದ ಕಾರ್ಯಕ್ರಮವಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ ಕಾರ್ಯಕ್ರಮವಾಗಿದ್ದು, ಇಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ, ಆದ್ಯತೆಯಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 6 ನೇ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದುವರೆಗಿನ ಜನ ಸ್ಪಂದನಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ತಾಲೂಕಿನಲ್ಲಿ ಜಿಲ್ಲಾಮಟ್ಟದ ಜನಸ್ಪಂದನಾ ಕಾರ್ಯಕ್ರಮ ಮಾಡಬೇಕೆಂದು ಉದ್ದೇಶವಿದೆ ಎಂದರು.

ಜನಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ದೂರದ ಜಿಲ್ಲಾ ಕೇಂದ್ರ ಹಾಗೂ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು, ಅವರು ಇರುವ ಕಡೆಗಳಿಗೆ ಎಲ್ಲಾ ಅಧಿಕಾರಿಗಳೊಂದಿಗೆ ತೆರಳಿ ಅವುಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಜನ ಸ್ಪಂದನ ಕಾರ್ಯಕ್ರಮದ ಮೂಲಕ 5 ದಶಕಗಳಲ್ಲಿ ಪರಿಹಾರ ಸಿಗದೇ ಇರುವ ಸಮಸ್ಯೆಗಳಿಗೆ ಕೂಡ ಸೂಕ್ತ ಪರಿಹಾರ ದೊರಕಿಸಿಕೊಡಲಾಗಿದೆ. ಅಧಿಕಾರಿಗಳ ಬಳಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ನೇರವಾಗಿ ಹೋಗಿ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವ ವ್ಯವಸ್ಥೆ ಜಿಲ್ಲೆಯಲ್ಲಿದೆ ಎಂದರು.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದೆ 5 ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತಗೊಂಡ ಒಟ್ಟು 941 ಹಾಗೂ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸ್ವೀಕೃತಗೊಂಡ ಒಟ್ಟು 975 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಹೊಸದಾಗಿ 6 ಇಂದಿರಾ ಕ್ಯಾಂಟೀನ್ ಗಳು ಶೀಘ್ರದಲ್ಲಿ ಆರಂಭಗೊಳ್ಳಲಿದ್ದು, ಇಂದಿನ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಖಾಯಂ ಆಗಿ ನೇಮಕಗೊಂಡ ಒಟ್ಟು 34 ಪೌರಕಾರ್ಮಿಕರು, ಕ್ಲೀರ್ಸ್ ಮತ್ತು ಲೋರ್ಸ್ ಗಳಿಗೆ ನೇಮಕಾತಿ ಆದೇಶ, ಜಿಲ್ಲಾ ಮತ್ತು ತಾಲೂಕು ಪಂಚಯತ್ ಅನುದಾನದಿಂದ ವಿಕಲಚೇತನರಿಗೆ 93 ಲಕ್ಷ ರೂ ವೆಚ್ಚದ ಸಾಧನ ಸಲಕರಣಗಳ ವಿತರಣೆ, ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಪಿಂಚಣಿ ಆದೇಶಪತ್ರಗಳು, ಮೀನುಗಾರರಿಗೆ ಸಂಕಷ್ಟ ಪರಿಹಾರ ನಿಧಿಯ ಮೊತ್ತ, ಎಂಡೋಸಲ್ಫಾನ್ ಪೀಡಿತರಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಗುವುದು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಭಟ್ಕಳ ಪುರಸಭೆಯ ಅಧ್ಯಕ್ಷ ಅಲ್ತಾಫ್ ಕರೂರಿ ಮೊಹಿದ್ದೀನ್, ಜಾಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಸೈಯದ್ ಇಮ್ರಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಜಿ. ಆರ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಕಾವ್ಯಾರಾಣಿ, ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತಿತ್ತರರು ಹಾಜರಿದ್ದರು.

Leave a Reply