ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜಾವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ಈ ರೋಗದ ಬಗ್ಗೆ ಹೆಚ್ಚಿನ ಆತಂಕಕ್ಕೆ ಒಳಗಾಗದೆ, ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು(SOP) ಪಾಲಿಸುವ ಮೂಲಕ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಕ್ಕಿಜ್ವರದ ಕುರಿತಂತೆ ಜಿಲ್ಲೆಯಲ್ಲಿರುವ 160 ಕೋಳಿ ಫಾರಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವುಗಳ ಮಾಲೀಕರಿಗೆ ಹಕ್ಕಿ ಜ್ವರದ ಲಕ್ಷಣಗಳು ಮತ್ತು ಇದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಾಮೂಹಿಕವಾಗಿ 50 ಕ್ಕೂ ಅಧಿಕ ಕೋಳಿಗಳು ಮತ್ತು ವಿದ್ಯುತ್ ಅವಘಡಗಳನ್ನು ಹೊರತುಪಡಿಸಿ ಇತರೆ ಕಾರಣಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳು ಮೃತಪಟ್ಟಿದ್ದು ಕಂಡುಬಂದಲ್ಲಿ ಕೂಡಲೇ ಮರಣದ ಕಾರಣದ ಬಗ್ಗೆ ಪರಿಶೀಲಿಸಿ, ಮಾಹಿತಿ ನೀಡುವಂತೆ ತಿಳಿಸಿದರು.
ಹಕ್ಕಿ ಜ್ವರ ಕುರಿತಂತೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಈ ರೋಗದ ಬಗ್ಗೆ ನಿಗಾ ಇಡಲಾಗಿದೆ. ಸಾರ್ವಜನಿಕರು ಶುಚಿತ್ವವನ್ನೂ ಗಮನದಲ್ಲಿಟ್ಟುಕೊಂಡು ಆರೋಗ್ಯವಾಗಿರುವ ಕೋಳಿ ಮಾಂಸವನ್ನು ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಎಂದಿನಂತೆ ಬಳಸಬಹುದು. ಯಾವುದೇ ರೀತಿಯ ಗೊಂದಲ, ಆತಂಕ ಬೇಡ ಎಂದರು.
ಹಕ್ಕಿ ಜ್ವರವು ವೈರಸ್ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಹಾಗೂ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು/ತ್ಯಾಜ್ಯಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಎಂದರು.
ಈ ರೋಗ ಪೀಡಿತರಲ್ಲಿ ಜ್ವರ, ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು. ಉಸಿರಾಟದಲ್ಲಿ ತೊಂದರೆ ಈ ಲಕ್ಷಣಗಳು ಕಾಣಿಸಿದ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಬೇಕು ಹಕ್ಕಿಜ್ವರವು ಮುನ್ನೆಚರಿಕೆಯಿಂದ ತಡೆಯಬಲ್ಲ ಖಾಯಿಲೆಯಾಗಿದೆ ಆದ್ದರಿಂದ ಖಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಮಾಹಿತಿಯನ್ನು ನೀಡಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಹಸೀಲ್ದಾರ್ ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ, ಕೋಳಿ ಫಾರಂಗಳ ಮಾಲೀಕರಿಗೆ ಮತ್ತು ಕೋಳಿ ಮಾಂಸ ಮಾರಾಟಗಾರರು ಹಾಗೂ ಸಾರ್ವಜನಿಕರಿಗೆ ಹಕ್ಕಿಜ್ವರದ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಅರ್ಚನಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕ್ಯಾ. ಡಾ.ರಮೇಶ್ ರಾವ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಕ್ರಿಮ್ಸ್ನ ವೈದ್ಯರು ಮತ್ತು ವೀಡಿಯೋ ಕಾನ್ಫ್ರೆನ್ಸ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್ ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಹಾಜರಿದ್ದರು.




