ಬೆಂಗಳೂರು: ಆಡಳಿತ ರೂಢ ಬಿಜೆಪಿ ನಾಯಕರು ಡಬಲ್ ಎಂಜಿನ್ ಸರ್ಕಾರ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಗಡಿ ವಿವಾದ ಬಗೆಹರಿಸಲು ಶ್ರಮಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಕಿಡಿಕಾರಿದ್ದಾರೆ.
ಗಡಿ ವಿವಾದವನ್ನು ಬಗೆ ಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂಬುದು ಹಲವು ದಶಕಗಳ ಬೇಡಿಕೆ. ಈಗ ಡಬಲ್ ಇಂಜಿನ್ ಸರ್ಕಾರ ವಿವಾದವನ್ನು ಬಗೆ ಹರಿಸಲು ಕ್ರಮ ಕೈಗೊಳ್ಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.




