18,172 ಕೋಟಿ ಕೇಳಿದ ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಕೊಟ್ಟ ಮೋದಿ

2 years ago

ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶದಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ 3454 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.ಇದಕ್ಕೆ ಬಿಜೆಪಿ ಹರ್ಷ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದೆ.

ಆದರೆ ಕಾಂಗ್ರೆಸ್ ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಾಳೆ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಸುವುದಾಗಿ ಘೋಷಸಿದೆ.

ಮಳೆ ಅಭಾವದ ಹಿನ್ನೆಲೆಯಲ್ಲಿ ರಾಜ್ಯದ 226 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ, ಕಳೆದ ಸೆಪ್ಟೆಂಬರ್ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಇದಾದ ನಂತರ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿತ್ತು.

ಬಳಿಕ ಮಂತ್ರಿಗಳ ನಿಯೋಗ ಕೇಂದ್ರದ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು. ಆದರೆ, ಕೇಂದ್ರದಿಂದ ಯಾವುದೇ ನೆರವು ಬಿಡುಗಡೆಯಾಗಲಿಲ್ಲ. ಇದಾದ ಬಳಿಕ ಮುಖ್ಯಮಂತ್ರಿಗಳ ನಿಯೋಗ ಪ್ರಧಾನಿ ಮತ್ತು ಕೇಂದ್ರ ಗೃಹ ಮಂತ್ರಿಗಳನ್ನು ಭೇಟಿ ಮಾಡಿ ನೆರವಿಗೆ ಮನವಿ ಸಲ್ಲಿಸಿತ್ತು.

ಆದರೂ ನೆರವು ಬಿಡುಗಡೆಯಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ ತಮ್ಮ ಸಹೋದ್ಯೋಗಿಗಳೊಂದಿಗೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಆದರೂ ಪರಿಹಾರ ಬಿಡುಗಡೆಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ವಾಗ್ದಾನ ನೀಡಿತ್ತು. ಅದರಂತೆ ಈಗ ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಇದರಿಂದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಗೆಲುವು ಸಿಕ್ಕಂತಾಗಿದೆ.

Leave a Reply