ವಕ್ಫ್ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು: ಸಿದ್ದರಾಮಯ್ಯ

1 year ago

ಬೆಂಗಳೂರು: ವಕ್ಫ್ ಆಸ್ತಿ ವಿಚಾರವಾಗಿ ಬಿಜೆಪಿ ನಡೆಸುತ್ತಿರುವುದು ಪ್ರತಿಭಟನೆಯಲ್ಲ, ಅದು ಸಂಪೂರ್ಣ ರಾಜಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ಒತ್ತುವರಿಗೆ ನೀಡಿದ್ದ ನೋಟಿಸ್ಗಳನ್ನು ಸರ್ಕಾರ ಹಿಂಪಡೆಯುವುದಾಗಿ ತಿಳಿಸಿದೆ. ಆದಾಗ್ಯೂ ಬಿಜೆಪಿ ರಾಜಕಾರಣವನ್ನು ಮುಂದುವರೆಸಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ನಾಯಕನಾಗಿದ್ದವನು ಜನರ ಬದುಕನ್ನು ಯಾವ ರೀತಿ ಬದಲಾವಣೆ ಮಾಡಿದ್ದಾನೆ ಎಂಬುದು ಮುಖ್ಯವಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಯಾರ್ಯಾರು ಏನೇನು ಮಾಡಿದ್ದಾರೆ ಎಂಬದನ್ನು ಜನ ಪಟ್ಟಿ ಮಾಡುತ್ತಾರೆ. ಅದರ ಆಧಾರದ ಮೇಲೆ ಅಂಕ ನೀಡುತ್ತಾರೆ ಎಂದರು.

ಸಿಎಂ ಸಿದ್ದರಾಮಯ್ಯ ಮಾತನಾಡಿ, ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದರು.

ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ. ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ ಎಂದರು.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣ ನೋಟಿಸ್ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದಾರೆ ಎಂದರು.

Leave a Reply