ಡಿ.ವಿ.ಸದಾನಂದಗೌಡ, ಜೆ.ಸಿ.ಮಾಧುಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ

2 years ago

ಬೆಂಗಳೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವಂತೆ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲಕ್ಕೆ ಕಾರಣವಾಗಿವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲ್ಪಟ್ಟಿರುವ ಮಾಜಿ ಸಿಎಂ ಸದಾನಂದ ಗೌಡ ಪಕ್ಷ ತೊರೆಯಲು ಸಜ್ಜಾಗಿದ್ದಾರೆ.

ಮತ್ತೊಂದೆಡೆ ಸಂಧಾನಕ್ಕೆ ಮಣಿಯದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮದಿಂದ ದೂರ ಉಳಿದು ಗಮನ ಸೆಳೆದರೆ, ಮಾಜಿ ಸಚಿವ ಜಿಸಿ ಮಾಧುಸ್ವಾಮಿ ಪಕ್ಷಕ್ಕೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ.

ತುಮಕೂರಿನಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ಮಾಧುಸ್ವಾಮಿ ಇದೀಗ ಟಿಕೆಟ್ ನಿರಾಕರಿಸಲ್ಪಟ್ಟಿದ್ದರಿಂದ ಬೇಸರಗೊಂಡಿದ್ದು, ಬೆಂಬಲಿಗರ ಸಭೆ ನಡೆಸಿದರು. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಸುವ ದೃಷ್ಟಿಯಿಂದ ಕಾಂಗ್ರೆಸ್ ಬೆಂಬಲಿಸುವಂತೆ ಮಾಧುಸ್ವಾಮಿ ಅವರಿಗೆ ಬೆಂಬಲಿಗರು ಆಗ್ರಹಿಸಿದ್ದು, ಇದಕ್ಕೆ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ.

ನಾಳೆಯೂ ಬೆಂಬಲಿಗರ ಸಭೆ ಕರೆದಿರುವ ಮಾಧುಸ್ವಾಮಿ ಅಲ್ಲಿ ಚರ್ಚಿಸಿದ ನಂತರ ಕಾಂಗ್ರೆಸ್ ಸೇರುವ ಕುರಿತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಅಭಿಮಾನಿಗಳು ಬೆಂಬಲಿಗರು ಮತ್ತು ಕುಟುಂಬ ಸದಸ್ಯರೊಂದಿಗೆ ಇಂದು ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಡಿ.ವಿ.ಸದಾನಂದ ಗೌಡ, ತಮಗೆ ಟಿಕೆಟ್ ನಿರಾಕರಿಸಿರುವ ಕ್ರಮದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಚುನಾವಣಾ ನಿವೃತ್ತಿ ಘೋಷಿಸಿದ್ದ ತಮ್ಮನ್ನು ಸಂಪರ್ಕಿಸಿದ ಪಕ್ಷದ ಕೆಲವು ನಾಯಕರು ನನ್ನ ಮನೆಗೆ ಬಂದು ಮನವೊಲಿಸಿದ್ದರು. ಅದಾದ ನಂತರ ತಾವು ನಿಲುವು ಬದಲಾಯಿಸಿ ಚುನಾವಣೆಗೆ ಸ್ಪರ್ಧೆ ಮಾಡುವ ನಿರ್ಧಾರ ಕೈಗೊಂಡಿದ್ದೆ. ಆದರೆ ಈಗ ಏಕಾಏಕಿ ಟಿಕೆಟ್ ನಿರಾಕರಿಸಲಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ನಾಳೆ ಸುದೀರ್ಘವಾಗಿ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ನ ಪ್ರಮುಖ ನಾಯಕರೊಬ್ಬರು ನಿನ್ನೆ ತಮ್ಮ ಮನೆಗೆ ಬಂದು ಮಾತುಕತೆ ನಡೆಸಿದ್ದಾರೆ. ಆ ವಿವರಗಳನ್ನು ಹೇಳಲು ಆಗುವುದಿಲ್ಲ. ನಾಳೆ ಎಲ್ಲವನ್ನು ತಿಳಿಸುತ್ತೇನೆ ಎಂದು ಅವರು ಹೇಳಿದರು.

ಮಾಜಿ ಸಚಿವ ಈಶ್ವರಪ್ಪ ಅವರ ಬಂಡಾಯ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಈಶ್ವರಪ್ಪ ಬಳಿ ಮಾತನಾಡಿದ್ದೇನೆ. ಯಾರಿಗೆಲ್ಲಾ ಅನ್ಯಾಯವಾಗಿದೆಯೋ ಅವರೆಲ್ಲಾ ಹೈಕಮಾಂಡ್ ನಾಯಕರ ಬಳಿ ಹೋಗೋಣ ಎಂದಿದ್ದೆ. ಆದರೆ ಈಶ್ವರಪ್ಪ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಅವರ ನಿಲುವಿನ ಬಗ್ಗೆ ನಾನೇನು ಹೇಳಲ್ಲ. ನಾಳೆ ನನ್ನ ನಿರ್ಧಾರ ಹೇಳುತ್ತೇನೆ ಎಂದರು.

ರಾಜ್ಯ ರಾಜಕೀಯದಲ್ಲಿ ನನಗೆ ಆಗಿರುವ ಕೆಲವು ಅನ್ಯಾಯಗಳ ಬಗ್ಗೆ ಮನದಾಳದ ವಿಚಾರಗಳನ್ನು ಹಂಚಿಕೊಳ್ಳಲು ನಾಳೆ ಸುದ್ದಿಗೋಷ್ಠಿ ಕರೆದಿದ್ದೇನೆ. ಈಗಲೇ ನಿರ್ಣಯ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ ಎಂದು ಮಾರ್ಮಿಕವಾಗಿ ನುಡಿದರು.

Leave a Reply