ಹೆಲಿಕಾಪ್ಟರ್ ಗೆ ಗುದ್ದಿದ ಹದ್ದು: ಕೂದಲೆಳೆ ಅಂತರದಲ್ಲಿ ಡಿ.ಕೆ.ಶಿವಕುಮಾರ್ ಪಾರು

3 years ago

ಬೆಂಗಳೂರು: ವಿಧಾನಸಭೆ ಚುನಾವಣೆಯ ಮತದಾನಕ್ಕೆ ಮತ ಕೆಲವೇ ದಿನಗಳು ಬಾಕಿ ಇರುವಂತೆ ಪ್ರಚಾರದ ಭರಾಟೆ ತೀವ್ರಗೊಂಡಿರುವ ಬೆನ್ನೆಲ್ಲೇ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕೂದಲೆಳೆ ಅಂತರದಲ್ಲಿ ಭಾರಿ ಗಂಡಾಂತರದಿಂದ ಪಾರಾಗಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಪಕ್ಷದ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಅವರು ಈ ಮೊದಲೇ ನಿಗದಿಯಾಗಿದ್ದ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಲು ನಿರ್ಗಮಿಸಿದರು.

ಇದಕ್ಕಾಗಿ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ನಲ್ಲಿ ಅವರು  ಮುಳಬಾಗಿಲಿಗೆ ತೆರಳಬೇಕಿತ್ತು.ನಿಗದಿಯಂತೆ ಜಕ್ಕೂರಿಗೆ ಆಗಮಿಸಿದ ಶಿವಕುಮಾರ್, ಮಾಧ್ಯಮ ಸಂಸ್ಥೆಯೊಂದರ ಪ್ರತಿನಿಧಿ ಹಾಗೂ ತಮ್ಮ ಆಪ್ತ ಸಿಬ್ಬಂದಿಯೊಂದಿಗೆ ಹೆಲಿಕ್ಯಾಪ್ಟರ್ ನಲ್ಲಿ ಕುಳಿತರು. 

ಹೆಲಿಕ್ಯಾಪ್ಟರ್ ಟೇಕ್ ಆಫ್ ಆಗಿ ಮುಳಬಾಗಿಲು ಕಡೆ ಪ್ರಯಾಣ ಬೆಳೆಸಿತು. ಇದಾದ ಕೆಲವೇ ನಿಮಿಷಗಳಲ್ಲಿ ಭಾರಿ ಗಾತ್ರದ ಹದ್ದೊಂದು ಹೆಲಿಕ್ಯಾಪ್ಟರ್ ಅನ್ನು ಅಪ್ಪಳಿಸಿತು. ಅದು ಅಪ್ಪಳಿಸಿದ ರಭಸಕ್ಕೆ ಹೆಲಿಕ್ಯಾಪ್ಟರ್ ನ ಒಂದು ಪಾರ್ಶ್ವದ ಗಾಜು ಒಡೆದು ಚೂರು ಚೂರಾಯಿತು. ತಕ್ಷಣವೇ ಸಮಯ ಪ್ರಜ್ಞೆ ಮೆರೆದ ಪೈಲೆಟ್ ಹೆಲಿಕ್ಯಾಪ್ಟರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿದರು. ಇದರಿಂದ ಭಾರೀ ಅನಾಹುತ ಒಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಯಿತು.

ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ಅವರು ‘ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ. ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7-8 ನಿಮಿಷ ಕಳೆದಿತ್ತು. ನಾವು ಹೊಸಕೋಟೆ ಹತ್ತಿರ ತಲುಪಿದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು. ಮಾಧ್ಯಮದವರು ಪಕ್ಷದ ಪ್ರಣಾಳಿಕೆ ಕುರಿತು ಸಂದರ್ಶನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್ ಹಾರಾಟದ ಎತ್ತರವನ್ನು ಕಡಿಮೆ ಮಾಡಿ ನಮ್ಮನ್ನು ರಕ್ಷಿಸಿದ್ದಾರೆ ಎಂದರು.

ಈಗ ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ಪ್ರಯಾಣದ ವೇಳೆ ಮೂರು ಹದ್ದುಗಳು ಎದುರಾಗಿದ್ದು, ಪೈಲಟ್ ಎರಡು ಹದ್ದುಗಳನ್ನು ದಾಟಿದ್ದರು. ಮೂರನೇ ಹದ್ದು ಕೆಳಗಡೆಯಿಂದ ಮೇಲೆ ಬಂದು ಡಿಕ್ಕಿ ಹೊಡೆಯಿತು. ಯಾರೂ ಇದರಿಂದ ಗಾಬರಿಯಾಗುವುದು ಬೇಡ, ಇದೊಂದು ಆಕಸ್ಮಿಕ, ಇದನ್ನು ಇಲ್ಲಿಗೆ ಬಿಟ್ಟು ಮುಂದೆ ಸಾಗೋಣ ಎಂದು ತಿಳಿಸಿದರು.

Leave a Reply