ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ: ರಾಜೇಶ್ ಎನ್.ಹೊಸಮನೆ

1 year ago

ಬಳ್ಳಾರಿ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.

ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದಲ್ಲಿ ಸಂಸ್ಥೆ ಸಭಾಂಗಣದಲ್ಲಿ ನಡೆದ ವ್ಯಾಪಾರಿ – ವಾಣಿಜ್ಯೋದ್ಯಮಿಗಳ ಸೌಹಾರ್ದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದು, ಶಿಕ್ಷಣದ ಮೂಲಕವೇ ಈ ಸಮಸ್ಯೆಗೆ ಪರಿಹಾರ ಸಾಧ್ಯ. ಅಧಿಕಾರಿಗಳು ಮತ್ತು ವ್ಯಾಪಾರಿ – ಉದ್ಯಮಿಗಳು ಪರಸ್ಪರ ಮಾನವೀಯತೆ ಆಧಾರದಲ್ಲಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿ, ಕಾರ್ಮಿಕ ಇಲಾಖೆ ಮತ್ತು ವ್ಯಾಪಾರ -ವಾಣಿಜ್ಯೋದ್ಯಮಿಗಳು ಪರಸ್ಪರ ಸಹಕಾರದಿಂದ ಇದ್ದಲ್ಲಿ ಮಾತ್ರ ಬಾಲಕಾರ್ಮಿಕ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸಾಧ್ಯ ಎಂದರು.

ಪ್ರತಿ ಮೂರು ಅಥವಾ ಆರು ತಿಂಗಳಿಗೆ ವ್ಯಾಪಾರಿ ಮತ್ತು ಉದ್ಯಮಿಗಳಿಗೆ ಅರಿವು ಕಾರ್ಯಾಗಾರ ಏರ್ಪಡಿಸಬೇಕು. ಕಾರ್ಮಿಕ ಇಲಾಖೆಯು ಕಾಲ ಕಾಲಕ್ಕೆ ಸಭೆ ನಡೆಸಬೇಕು ಎಂದರು.

ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ್ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿವಾರಣೆ ಮಾಡಲು ವ್ಯಾಪಾರಿಗಳು ಮತ್ತು ಉದ್ಯಮಿಗಳು ಪರಸ್ಪರ ಸಹಕಾರ ನೀಡಬೇಕು ಎಂದರು.

ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಮಾತನಾಡಿ, ಮಕ್ಕಳು ಶಿಕ್ಷಣ ಹೊಂದುವಲ್ಲಿ ಮೂಲಭೂತ ಹಕ್ಕು ಹೊಂದಿದ್ದು, ಮಕ್ಕಳನ್ನು ಸಾಕಲಾಗದ ಪೋಷಕರು – ಪಾಲಕರು ಇದ್ದಲ್ಲಿ ಮಕ್ಕಳ ಕಲ್ಯಾಣ ಸಮಿತಿಗೆ ತಿಳಿಸಿದಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಈ ವೇಳೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ಗೌರವ ಕಾರ್ಯದರ್ಶಿ ಕೆ.ಸಿ.ಸುರೇಶಬಾಬು, ಹೋಟಲ್ ಮಾಲೀಕರ ಸಂಘದ ಪೋಲಾ ವಿಕ್ರಮ, ವ್ಯಾಪಾರಿಗಳ ಪರವಾಗಿ ಜೆ.ರಾಜೇಶ್, ಲಕ್ಷ್ಮಿನಾರಾಯಣ, ಎಸ್.ಎಂ.ವೇಣುಗೋಪಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು- ಸದಸ್ಯರು ಹಾಗೂ ಇನ್ನಿತರರು ಹಾಜರಿದ್ದರು.

Leave a Reply