ಬೆಂಗಳೂರು: ದ್ವಿಚಕ್ರ ವಾಹನಗಳ ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದ ಅವರು, ಒಟ್ಟು 600 ಜನರಿಗೆ ವಾಹನಗಳನ್ನು ಒದಗಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 400 ಜನರಿಗೆ ನೀಡಲಾಗುವುದು ಎಂದರು.
ಸಫಾಯಿ ಕರ್ಮಚಾರಿಗಳಿಗೂ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿ ಅವರ ಬದುಕಿಗೆ ಶಕ್ತಿ ತುಂಬುವ, ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬದುಕನ್ನು ನಿರಾಳ ಮಾಡುವ ಅವಶ್ಯಕತೆ ಇದೆ. ಅವರು ಮಾಡುತ್ತಿರುವ ಕೆಲಸ ಅತ್ಯಂತ ಪ್ರಮುಖ ಕೆಲಸ. ನಾವು ಸೃಷ್ಟಿ ಮಾಡುವ ಕಸವನ್ನು ಪ್ರತಿನಿತ್ಯ ನಿರಂತರವಾಗಿ ದಣಿವಿಲ್ಲದೆ ಸ್ವಚ್ಛ ಮಾಡುತ್ತಿದ್ದಾರೆ. ಆ ಕಾಯಕವನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.
ವಿದೇಶದಲ್ಲಿ ಕರ್ಮಚಾರಿಗಳು ಕಾರುಗಳಲ್ಲಿ ಓಡಾಡುವುದನ್ನು ಕೇಳಿದ್ದೆವು. ಈಗ ಇದು ನಮ್ಮ ದೇಶದಲ್ಲಿಯೂ ಆಗುತ್ತಿದೆ. ಈಗ ಸ್ಕೂಟರ್ ನಲ್ಲಿ ಓಡಾಡುವಂತಾಗಿದ್ದು, ಬರುವ ದಿನಗಳಲ್ಲಿ ಅವರಿಗೆ ಕಾರುಗಳನ್ನು ಒದಾಗಿಸುವಂತಾಗುವ ವಿಶ್ವಾಸವಿದೆ. ಅವರ ಎಲ್ಲ ವಿಚಾರಗಳಿಗೆ ಸರ್ಕಾರ ಸ್ಪಂದಿಸುತ್ತಿದೆ ಎಂದರು.
ವಾಹನಗಳಿಗೆ ಬಾಕ್ಸ್ ಜೋಡಿಸಲು ಸೂಚಿಸಿದ್ದು, ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಪ್ರತಿ ಕ್ಷೇತ್ರಕ್ಕೆ ಬಾಕ್ಸ್ ಉಳ್ಳ 100 ಸ್ಕೂಟರ್ ಗಳನ್ನು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಒದಗಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಯೋಜನೆಯಿಂದ ಸುಮಾರು 25 ಸಾವಿರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನುಕೂಲವಾಗುತ್ತದೆ. ಸರ್ಕಾರ ಹಂತ ಹಂತವಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಯುವಕರಿಗೆ, ಎಸ್.ಸಿ/ ಎಸ್.ಟಿ ಜನಾಂಗದವರಿಗೆ ಮಹಿಳೆಯರಿಗೆ ಒದಗಿಸಲಾಗುತ್ತಿದೆ. ನಮ್ಮದು ಬಡವರ, ದುಡಿಯುವ ವರ್ಗದ ಪರವಾದ ಸರ್ಕಾರ. ಸಾಮಾಜಿಕ ನ್ಯಾಯವನ್ನು ಕೇವಲ ಮಾತಿನಲ್ಲಿ ಅಲ್ಲದೆ ಕೃತಿಯಲ್ಲಿ ಮಾಡಿ ತೋರಿಸುತ್ತಿರುವ ಸರ್ಕಾರ ಎಂದರು.
ಸಚಿವ ಗೋವಿಂದ ಕಾರಜೋಳ, ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ, ಸಫಾಯಿ ಕರ್ಮಚಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇನ್ನಿತರರು ಹಾಜರಿದ್ದರು.



