ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ: ಎಸ್.ಆರ್.ಪಾಟೀಲ

1 year ago

ಧಾರವಾಡ: ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ಕಂದಾಯ ವಿಭಾಗದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಹಳ್ಳಿ ಭಾಗಗಳಿಗೆ ಸರಿಯಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿ, ಯಾವುದೇ ಸಮಸ್ಯೆಯಾಗದಂತೆ ಗಮನಹರಿಸಿ. ಹುಬ್ಬಳ್ಳಿ, ಧಾರವಾಡಕ್ಕೆ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರು ಓಡಾಡುವುದರಿಂದ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಸರಿಯಾಗಿ ಬಸ್ಗಳ ಕಾರ್ಯಾಚರಣೆ ಆಗಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆಯಾಗಬೇಕು ಎಂದರು.

ಹೆಚ್ಚು ಮಳೆಯಾಗಿದ್ದರಿಂದ ಗ್ರಾಮೀಣ ಭಾಗದಲ್ಲಿರುವ ವಿದ್ಯುತ್ ಕಂಬಗಳು ಬಾಗಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂಬ ಸಾರ್ವಜನಿಕ ದೂರಗಳಿದ್ದು, ಹೆಸ್ಕಾಂ ಅಧಿಕಾರಿಗಳು ಈ ಕುರಿತು ಗಮನಹರಿಸಿ, ಪರಿಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ ನಿಯಮಾನುಸಾರ ಪಡಿತರ ವಿತರಣೆ ಮಾಡಲಾಗುತ್ತಿದೆ. ಮತ್ತು ನೇರ ನಗದು ವರ್ಗಾವಣೆ ಮೂಲಕ ಹಣ ಸಂದಾಯ ಮಾಡಲಾಗುತ್ತಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯನ್ನು ಬಳಸಿಕೊಂಡು ಹೈನುಗಾರಿಕೆ, ಕೋಳಿ ಸಾಕಾಣಿಕೆ, ಸ್ವಯಂ ಉದ್ಯೋಗ ಮತ್ತು ಉದ್ಯೋಗ ಸೃಷ್ಟಿಯಂತಹ ಕಾರ್ಯಗಳನ್ನು ಮಾಡುತ್ತಿರುವ ಫಲಾನುಭವಿಗಳನ್ನು ಗುರುತಿಸಿ ದಾಖಲಿಸುವಂತೆ ಅವರು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 4,04,848 ಜನ ಅರ್ಹ ಫಲಾನುಭವಿಗಳಿದ್ದು, 3,82,189 ಜನ ಫಲಾನುಭವಿಗಳಿಗೆ ನೋಂದಾಣಿಯಾಗಿದ್ದಾರೆ. ಈ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಮಾಡಲಾಗುತ್ತಿದೆ. ಸುಮಾರು 22 ಸಾವಿರ ಫಲಾನುಭವಿಗಳ ಅರ್ಜಿ ಪರಿಶೀಲನೆ ಬಾಕಿ ಇದ್ದು, ಶೇಕಡಾ 94.40 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಯುವ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಯುವಕರಿಗೆ ಕೌಶಲ್ಯ ಅಭಿವೃಧ್ಧಿ ತರಬೇತಿಯನ್ನು ನೀಡುವಂತಹ ಕಾರ್ಯವನ್ನು ಕೈಗೊಳ್ಳಬೇಕು. ವಿವಿಧ ಭಾಗಗಳಲ್ಲಿ ಯುವಕರಿಗೆ ಕೆಲಸದ ತರಬೇತಿ ನೀಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 4,919 ಜನ ನೊಂದಣಿಯಾಗಿದ್ದು, 1,738 ಪುರುಷ ಹಾಗೂ 2,091 ಮಹಿಳೆಯರು ಸೇರಿ ಒಟ್ಟು 3,829 ಜನ ಫಲಾನುಭವಿಗಳಿಗೆ ಸಹಾಯಧನ ಸರಕಾರದಿಂದ ಜಮೆ ಆಗುತ್ತಿದೆ. 1,090 ಜನ ಫಲಾನುಭವಿಗಳ ಅರ್ಜಿ ಪರಿಶೀಲನೆಯಲ್ಲಿದೆ ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ, ತಾಲ್ಲೂಕು ಮಟ್ಟದಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ ಹಾಗೂ ರತ್ನಾ ತೇಗೂರಮಠ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಹಾಜರಿದ್ದರು.

Leave a Reply