ಜಿಂಕೆಗಳ ಅಸಹಜ ಸಾವು ಕುರಿತು ತನಿಖೆಗೆ ಆದೇಶಿಸಿದ ಈಶ್ವರ್ ಖಂಡ್ರೆ

5 months ago

ಬೆಂಗಳೂರು: ಬೆಳಗಾವಿ ಜಿಲ್ಲೆ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ.

Leave a Reply