ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ ಈಶ್ವರ್ ಖಂಡ್ರೆ

1 year ago

ಬೆಂಗಳೂರು: ಬೀದರ್ ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಹಾಡು ಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಇಬ್ಬರು ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ ಅವರು, ಈ ನೋವಿನ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ ಎಂದರು.

ವಿಷಯ ತಿಳಿದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ತಾವು ಮಾತನಾಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ವಹಿಸಲು ಸೂಚಿಸಿರುವುದಾಗಿ ತಿಳಿಸಿದರು.

ಮೃತರ ಮನೆಗೆ ಭೇಟಿ: ಎ.ಟಿ.ಎಂ.ಗೆ ಹಣ ಸಾಗಿಸುವಾಗ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಏನು ಲೋಪ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

ಎಸ್ ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಿರಿ ವೆಂಕಟೇಶ್ ಎಂಬ ಭದ್ರತಾ ಸಿಬ್ಬಂದಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, ಶಿವಕುಮಾರ್ ಎಂಬ ಮತ್ತೊಬ್ಬ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಬೆಂಗಳೂರಿನಿಂದ ಹೈದ್ರಾಬಾದ್‌ಗೆ ಆಗಮಿಸಿ, ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಶಿವಕುಮಾರ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ನಂತರ, ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಸುದೀರ್ಘ ಮಾತುಕತೆ ನಡೆಸಿ, ಚಿಕಿತ್ಸೆ ವೆಚ್ಚದ ಬಗ್ಗೆ ಯಾವುದೇ ಚಿಂತೆ ಮಾಡದಂತೆ ಆಶ್ವಾಸನೆ ನೀಡಿ, ಶಿವಕುಮಾರ್ ಅವರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಮನವಿ ಮಾಡಿದೆನು ಮತ್ತು ಅವರ ಆರೋಗ್ಯದ ಸ್ಥಿತಿಗತಿಯನ್ನು ವಿವರವಾಗಿ ವಿಚಾರಿಸಿದರು.

ವೈದ್ಯರು ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಈ ದುರಂತದಿಂದ ತೀವ್ರ ಆಘಾತವಾಗಿದ್ದು, ದುರಂತಕ್ಕೆ ಕಾರಣವಾದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳುವ ಭರವಸೆಯನ್ನು ಕುಟುಂಬಸ್ಥರಿಗೆ ನೀಡಿದ್ದೇನೆ. ಗಾಯಾಳು ಮತ್ತು ಮೃತರ ಕುಟುಂಬಗಳಿಗೆ ಅಗತ್ಯ ಸಕಾಲಿಕ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.

Leave a Reply