ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ: ಎಂ ಬಿ ಪಾಟೀಲ್

1 year ago

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಬಳ್ಳಾರಿಗೆ ಭೇಟಿ ನೀಡಿ ಕೊಟ್ಟಿದ್ದ ಭರವಸೆಯಂತೆ ಇಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದ್ದು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಉಡುಪು ತಯಾರಿಕೆಯ ಕಂಪನಿಗಳೂ ಇರುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.

ಬಾಂಗ್ಲಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾದ ಮೇಲೆ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ ಉದ್ಯಮ ನೆಲ ಕಚ್ಚಿದೆ. ಹೂಡಿಕೆದಾರರು ಮತ್ತು ರಫ್ತುದಾರರ ಗಮನ ಈಗ ಬಳ್ಳಾರಿಯಲ್ಲಿನ ಜೀನ್ಸ್ ತಯಾರಿಕೆ ಉದ್ಯಮದ ಮೇಲೆ ಹರಿದಿದೆ. ಇದನ್ನು ನಾವು ಸದವಕಾಶವಾಗಿ ಪರಿವರ್ತಿಸಿಕೊಂಡು, ಹೂಡಿಕೆಯನ್ನು ಆಕರ್ಷಿಸಲಿದ್ದೇವೆ ಎಂದಿದ್ದಾರೆ.

ಬಳ್ಳಾರಿಯಲ್ಲಿ 500ಕ್ಕಿಂತಲೂ ಹೆಚ್ಚು ಜೀನ್ಸ್ ಉಡುಪು ತಯಾರಿಕೆ ಘಟಕಗಳಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹತ್ತಾರು ಸಾವಿರ ಉದ್ಯೋಗಗಳನ್ನು ಸೃಷ್ಟಿಸಿವೆ. ಇದಕ್ಕೆ ವ್ಯವಸ್ಥಿತ ರೂಪ ಕೊಟ್ಟು, ಇದನ್ನು ರಫ್ತು ಕೇಂದ್ರಿತವಾಗಿಯೂ ಬೆಳೆಸಬೇಕು ಎನ್ನುವುದು ಕೈಗಾರಿಕಾ ಇಲಾಖೆಯ ಚಿಂತನೆಯಾಗಿದೆ. ಇದಕ್ಕಾಗಿ ಜವಳಿ ಇಲಾಖೆಯ ಸಹಾಯವನ್ನೂ ಪಡೆಯಲಾಗುವುದು. ಆ ಇಲಾಖೆಯಲ್ಲಿ ಜೀನ್ಸ್ ತಯಾರಿಕೆ ಘಟಕಗಳಿಗೆ ರಿಯಾಯಿತಿ ಕೊಡುವ ವ್ಯವಸ್ಥೆ ಇದ್ದರೆ ಅದನ್ನೂ ಕೊಡಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಜವಳಿ ಸಚಿವರ ಜತೆಗೂ ಸಭೆ ನಡೆಸಲಾಗುವುದು ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು. ಇದಾದ ಮೇಲೆ, 2023ರ ಆಗಸ್ಟ್ 1ರಂದು ನಮ್ಮ ಇಲಾಖೆಗೆ ಪತ್ರ ಬರೆದು, ಈ ಬಗ್ಗೆ ಗಮನ ಸೆಳೆದಿದ್ದರು. ಈ ಯೋಜನೆಯ ಅನುಷ್ಠಾನಕ್ಕೆ ಈಗ ಕಾಲ ಪ್ರಶಸ್ತವಾಗಿದ್ದು, ಅಂತಾರಾಷ್ಟ್ರೀಯ ಪರಿಸ್ಥಿತಿ ಅನುಕೂಲಕರವಾಗಿದೆ ಎಂದಿದ್ದಾರೆ.

ಸಿಎಂ ಸಿದ್ಧರಾಮಯ್ಯ ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್ಟಿನಲ್ಲೂ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಈಗ ಅಸಂಘಟಿತವಾಗಿರುವ ಜೀನ್ಸ್ ಉದ್ಯಮಕ್ಕೆ ಸಂಘಟಿತ ರೂಪ ಕೊಟ್ಟು, ಇದನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದಿದ್ದಾರೆ.

ಬಳ್ಳಾರಿ ಜೀನ್ಸ್ ಪಾರ್ಕ್ ನಿಂದ ಪ್ರಾದೇಶಿಕ ಆರ್ಥಿಕತೆಗೆ ಚೈತನ್ಯ ಬರಲಿದೆ. ಜತೆಗೆ ನಾವೀನ್ಯತೆ ಮತ್ತು ಉಡುಪು ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಗಳಿಗೆ ಆದ್ಯತೆ ಸಿಗಲಿದೆ. ಬಳ್ಳಾರಿ ಸುತ್ತಮುತ್ತ ಈಗಾಗಲೇ ಸಕ್ರಿಯವಾಗಿರುವ ಜೀನ್ಸ್ ಉಡುಪು ತಯಾರಿಕೆ ಘಟಕಗಳಿಗೂ ಹೆಚ್ಚಿನ ನೆರವು ನೀಡಲಾಗುವುದು. ಜೀನ್ಸ್ ಉಡುಪುಗಳು ಯುವಜನಾಂಗಕ್ಕೆ ಅಚ್ಚುಮೆಚ್ಚಿನದಾಗಿವೆ. ಇಲ್ಲಿರುವ ಮಾರುಕಟ್ಟೆಯನ್ನು ನಾವು ಗುರಿಯಾಗಿಟ್ಟುಕೊಂಡು, ದಾಪುಗಾಲಿಡಲಿದ್ದೇವೆ. ರಾಜ್ಯದ ಉದ್ಯಮಸ್ನೇಹಿ ಕೈಗಾರಿಕಾ ನೀತಿಯು ಇದಕ್ಕೆ ಮತ್ತಷ್ಟು ಇಂಬು ಕೊಡಲಿದೆ ಎಂದಿದ್ದಾರೆ.

Leave a Reply