ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನಕ್ಕೆ ಕೊಡುವ ಮತ: ಯಡಿಯೂರಪ್ಪ

2 years ago

ಬೆಂಗಳೂರು: ದೇಶಾದ್ಯಂತ ಪ್ರಧಾನಿ ಮೋದಿ ಪರವಾದ ಅಲೆ ಬೀಸುತ್ತಿದ್ದು,ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರ ಗೆದ್ದು ಸಂಸದರನ್ನು ದೆಹಲಿಗೆ ಕರೆದುಕೊಂಡು ಹೋಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೊಡುವ ಒಂದೊಂದು ಮತವೂ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ದೇಶದ ಅಭದ್ರತೆಗೆ ಕೊಡುವ ಮತ ಆಗುತ್ತೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಅವರಿಗೆ 2 ಕೋಟಿ ಉದ್ಯೋಗ ಎಲ್ಲಿ ಎಂದು ಕೇಳುತ್ತಿದ್ದಾರೆ? ದೇಶದಲ್ಲಿ 7 ಕೋಟಿ ಹೊಸ ಉದ್ಯೋಗ ಭವಿಷ್ಯ ನಿಧಿ ಅಡಿ ಸೃಷ್ಟಿ ಆಗಿದೆ. ಹೆಚ್‍ಎಎಲ್ ಮುಚ್ಚಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದ್ರೆ ಅಲ್ಲಿ 84,000 ಕೋಟಿ ಕೆಲಸ ಆಗಿದೆ. ಈಗ 54,000 ಕೋಟಿ ರೂ. ವೆಚ್ಚದ ಕೆಲಸ ಅಲ್ಲಿ ನಡೆಯುತ್ತಿದೆ. ಈಗ ರಾಹುಲ್ ಗಾಂಧಿ ಕ್ಷಮೆ ಕೇಳುತ್ತಾರಾ? ಅಥವಾ ಡಿಕೆಶಿ ಅವರಿಂದ ಕ್ಷಮೆ ಕೇಳಿಸುತ್ತಾರಾ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಸರ್ಕಾರ ಕಳೆದ 10 ತಿಂಗಳಲ್ಲಿ ಎಷ್ಟು ಉದ್ಯೋಗ ಸೃಷ್ಟಿ ಮಾಡಿದೆ. ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಎಕ್ಸ್ ಖಾತೆಯಲ್ಲಿ ಮಾತ್ರ ಉದ್ಯೋಗ ಸೃಷ್ಟಿ ಆಗುತ್ತಿದೆ ಅಷ್ಟೇ ಎಂದು ವ್ಯಂಗ್ಯವಾಡಿದ ಅವರು, ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡಿದ ಹಣವನ್ನು ರಾಜ್ಯ ಸರ್ಕಾರ ರೈತರಿಗೆ ಕೊಟ್ಟಿಲ್ಲ,ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಆಪಾದಿಸಿದರು.

ಇದಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮಾಡಿರುವ ತಾರತಮ್ಯ ಮತ್ತು ತೆರಿಗೆ ಪಾಲು ನೀಡುವಲ್ಲಿ ಆಗಿರುವ ವಂಚನೆ ಬಗ್ಗೆ ಯಡಿಯೂರಪ್ಪ ಅವರು ಮಾತನಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯಕ್ಕಾಗಿರುವ ತೆರಿಗೆ ಅನ್ಯಾಯ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗಳ ಕುರಿತು ಮೊದಲು ಉತ್ತರ ಕೊಡಲಿ, ಅದನ್ನು ಬಿಟ್ಟು ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪಿಸಿ ದಾರಿ ತಪ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವಾಗ ಕಣ್ಣೀರು ಹಾಕಿದ್ದು ಏಕೆ? ಬರಪರಿಸ್ಥಿತಿ ಇದ್ದರೂ ರಾಜ್ಯಕ್ಕೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗದಿರುವುದು ಏಕೆ? ಎಂಬ ವಿಚಾರಗಳ ಕುರಿತು ಉತ್ತರ ನೀಡಲಿ ಎಂದು ತಿರುಗೇಟು ನೀಡಿದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ತಾವು ರಾಜಕೀಯಕ್ಕೆ ಎಳೆದು ತರಲಿಲ್ಲ. ಅವರಿಂದ ಯಾವುದೇ ಉತ್ತರವನ್ನೂ ಬಯಸಿಲ್ಲ. ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಿದ ಬಿಜೆಪಿ ನಾಯಕರ ಜೊತೆ ಮಠಕ್ಕೆ ಭೇಟಿ ನೀಡಿದ್ದ ಬಗ್ಗೆ ತಮ್ಮ ಆಕ್ಷೇಪವಿದೆ. ಕುಮಾರಸ್ವಾಮಿಯವರು ಅಥವಾ ಜೆಡಿಎಸ್ ನಾಯಕರು ಪ್ರತ್ಯೇಕವಾಗಿ ಮಠಕ್ಕೆ ಹೋಗಿದ್ದರೆ ನಮ್ಮ ಅಭ್ಯಂತರವಿಲ್ಲ ಎಂದರು.

Leave a Reply