ಬೆಂಗಳೂರು: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿರುವ ಅಲ್ಲಮಪ್ರಭು ಸ್ವಾಮಿ ದೇವಸ್ಥಾನ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಒಳಪಡುವ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ಹೈಕೋರ್ಟ್ ಆದೇಶ ಮಾಡಿದೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ದೇವಾಲಯ ಹಾಗೂ ಅದಕ್ಕೆ ಸಂಬಂಧಿಸಿದ ಶಾಸನ ಹಾಗೂ ಪಳೆಯುಳಿಕೆಗಳು ಕರ್ನಾಟಕ ಪಾರಂಪರಿಕ ಸ್ಮಾರಕಗಳ ಕಾಯ್ದೆ-1961ರ ಅನ್ವಯ ಪುರಾತನ ಸ್ಮಾರಕಗಳ ವ್ಯಾಪ್ತಿಗೆ ಒಳಪಡುತ್ತವೆಯೋ ಹೇಗೆ ಎಂಬುದನ್ನು ನಿರ್ಧರಿಸಲು ತ್ರಿಸದಸ್ಯ ತಜ್ಞರ ಸಮಿತಿ ರಚಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮಹಾರಾಷ್ಟ್ರದ ಕೊಲ್ಹಾಪುರದ ಗಡಹಿಂಗ್ಲಜ ನಗರದ ಕಾನೂನು ವಿದ್ಯಾರ್ಥಿ ನಿಖಿಲ್ ವಿಠ್ಠಲ ಪಾಟೀಲ ಎಂಬುವರು ರಾಜ್ಯ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅಲ್ಲಮ ಪ್ರಭು ಸ್ವಾಮಿ ದೇವಾಲಯ ಶತಮಾನಕ್ಕೂ ಹಳೆಯದಾಗಿದ್ದು, ಅದನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಬೇಕು. ದೇವಾಲಯ ವರ್ಷದ ಆರು ತಿಂಗಳು ನೀರಿನಲ್ಲಿ ಮುಳುಗುವುದರಿಂದ ಅದನ್ನು ಸ್ಥಳಾಂತರ ಮಾಡಬೇಕು. ದೇವಸ್ಥಾನವನ್ನು 17 ಮತ್ತು 18ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದು, ಅದು ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನಕ್ಕೆ ಒಳಪಡುತ್ತದೆ. ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವದ ಹಿನ್ನೆಲೆಯಲ್ಲಿ ದೇವಾಲಯವನ್ನು ಪ್ರಾಚೀನ ಸ್ಮಾರಕ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ್ ಕಾಮತ್, ಅಲ್ಲಮ ಪ್ರಭು ದೇವಾಲಯವನ್ನು ರಾಷ್ಟ್ರೀಯ ಮಹತ್ವದ ಸ್ಮಾರಕ ಎಂದು ಘೋಷಿಸಲಾಗಿಲ್ಲ. ಆದರೆ, ಅದು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಪಳೆಯುಳಿಕೆ ಕಾಯ್ದೆ ಅಡಿ ಪ್ರಾಚೀನ ಸ್ಮಾರಕಗಳ ವ್ಯಾಖ್ಯಾನದ ವ್ಯಾಪ್ತಿಗೆ ಒಳಪಡುತ್ತದೆ ಎಂದರು.
ಇದನ್ನು ಆಲಿಸಿದ ನ್ಯಾಯಪೀಠ, ಅರ್ಜಿದಾರರ ಮನವಿಗೆ ಅನುಗುಣವಾಗಿ ವಸ್ತುಸ್ಥಿತಿ ಅರಿಯಲು ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿಯನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಬೇಕು. ಈ ಕುರಿತ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿದೆ.




