ಬೆಂಗಳೂರು: ವರ್ಷದ ಮಹಾಮಳೆಗೆ ಕೊಚ್ಚಿ ಹೋಗಿದ್ದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ, ಬೆಳಗಿನಜಾವದ ಸಣ್ಣಮಳೆಗೂ ತತ್ತರಿಸಿದೆ. ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಈ ಹೆದ್ದಾರಿ ಈಗ ಜನರ ಪಾಲಿಗೆ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿಸುತ್ತಿದೆ. ಇದು ಎಕ್ಸ್ ಪ್ರೆಸ್ ಹೆದ್ದಾರಿಯೋ, ಎಕ್ಸ್ ಪ್ರೆಸ್ ಹೆಮ್ಮಾರಿಯೋ?
ಸಣ್ಣ ಮಳೆಯಿಂದಲೇ ಹೆದ್ದಾರಿಯ ಅಂಡರ್ ಪಾಸ್ ಗಳು ಜಲಾವೃತವಾಗಿವೆ. ವಾಹನಗಳು ಸಿಕ್ಕಸಿಕ್ಕಲ್ಲಿ ನೀರಿನಲ್ಲಿ ಮುಳುಗಿವೆ. ಸರಣಿ ಅಪಘಾತಗಳಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಅವೈಜ್ಞಾನಿಕ ಕಾಮಗಾರಿಯಿಂದಲೇ ಈ ಅವಾಂತರ ಸೃಷ್ಟಿ ಆಗಿದೆ. ಇದಕ್ಕೆ ರಾಜ್ಯ, ಕೇಂದ್ರ ಸರಕಾರಗಳು, ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರೇ ನೇರ ಹೊಣೆ.
ಇವರು ಮಾಡಿದ ಪಾಪಕ್ಕೆ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು, ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಬಾಕಿ ಬಿದ್ದಿರುವ ಎಲ್ಲಾ ಕಾಮಗಾರಿಗಳನ್ನು ಕೂಡಲೇ ಮುಗಿಸಬೇಕು. ಅದುವರೆಗೂ ಟೋಲ್ ಸಂಗ್ರಹ ಮಾಡಬಾರದು. ಜನರು ಕೂಡ ಟೋಲ್ ಕಟ್ಟುವ ಅವಶ್ಯಕತೆ ಇಲ್ಲ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ



