ಸಿದ್ದರಾಮಯ್ಯ ಕಾರು ತಡೆದು ಪ್ರತಿಭಟಿಸಿದ ರೈತರು

10 months ago

ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಅವಕಾಶ ನೀಡದೇ ಇರುವುದರಿಂದ ಕುಪಿತಗೊಂಡ ರೈತರು, ಮುಖ್ಯಮಂತ್ರಿಯವರ ಕಾರು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಹೊರವಲಯದ ಸರ್ಕ್ಯೂಟ್ ಹೌಸ್ ಆವರರಣದಲ್ಲಿ ನಡೆಯಿತು.

ವಿವಿಧ ಬೇಡಿಕೆಗಳನ್ನು ಮುಖ್ಯಮಂತ್ರಿ ಬಳಿ ಹೇಳಿಕೊಳ್ಳಲು ಆಗಮಿಸಿದ್ದ ರೈತರಿಗೆ ಪೋಲೀಸರು ಅವಕಾಶ ಮಾಡಿಕೊಡಲಿಲ್ಲ. ಪೊಲೀಸರ ವರ್ತನೆಯಿಂದ ಅಸಮಾಧಾನಗೊಂಡ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ತಡೆದರೆ, ಮುಖಂಡ ಸಿಎಂ ಕಾರಿನ ಮುಂದೆ ಮಲಗಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಕಾರು ಚಾಲನೆ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ರೈತರ ಮನವೊಲಿಸಲು ಪ್ರಯತ್ನಿಸಿದರು. ಬಳಿಕ ಮುಖ್ಯಮಂತ್ರಿಯವರು ಕಾರಿನಲ್ಲಿ ಕುಳಿತೇ ರೈತರ ಬೇಡಿಕೆ ಆಲಿಸಿ, ಮನವಿ ಸ್ವೀಕರಿಸಿದರು.

ಜಿಲ್ಲೆಯ 538 ಕೆರೆಗಳಲ್ಲಿ 100 ಕೆರೆಗಳ ಹೂಳು ತೆಗೆಯಲಾಗಿದೆ. ಉಳಿದ ಕೆರೆಗಳ ಹೂಳು ತೆಗೆದರೆ ರೈತರಿಗೆ ಅನುಕೂಲವಾಗಲಿದೆ. ಜಲ ಸಂರಕ್ಷಣೆಯ ದೃಷ್ಟಿಯಿಂದ ಕೆರೆಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಯವರಲ್ಲಿ ರೈತರು ಮನವಿ ಮಾಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನೆಲ, ಜಲ ಹಾಗೂ ಪರಿಸರ ಸಂರಕ್ಷಣಾ ಆಂದೋಲನಾ ಸಮಿತಿಯ ಸಂಚಾಲಕ ರವಿಕುಮಾರ ಬಲ್ಲೂರ್, ರೈತರ ನಿಯೋಗವನ್ನು ಪೊಲೀಸರು ತಡೆದಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿಯೇ ರೈತರನ್ನು ಪೊಲೀಸರು ಅವಮಾನಿಸಿದ್ದಾರೆ. ರೈತರನ್ನು ಎಳೆದಾಡಿದ ಹಾಗೂ ಹಲ್ಲೆಗೆ ಯತ್ನಿಸಿದ ಪೊಲೀಸರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದರು.

Leave a Reply