ಕಾಂಗ್ರೆಸ್ ಹೈಕಮಾಂಡ್ ನಿಂದ ವಿಧಾನ ಪರಿಷತ್ ಆಕಾಂಕ್ಷಿಗಳ ಭವಿಷ್ಯ ನಿರ್ಧಾರ

2 years ago

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ನ ಹನ್ನೊಂದು ಸ್ಥಾನಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ನಡೆಯುತ್ತಿರುವ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಲವು ಸುತ್ತಿನಲ್ಲಿ ಎಐಸಿಸಿ ಮುಖಂಡರಾದ ರಣಜಿತ್ ಸಿಂಗ್ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಭೆ ನಡೆಯಲಿದೆ. ಅದರ ಬಳಿಕ ಅಭ್ಯರ್ಥಿಗಳ ಆಯ್ಕೆ ಆಗಲಿದೆ ಎಂದು ತಿಳಿದುಬಂದಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಹೊಂದಿರುವ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ಕಾಂಗ್ರೆಸ್ ಏಳು ಸ್ಥಾನಗಳನ್ನು ಸುಲಭವಾಗಿ ಗಳಿಸಲಿದೆ. ಈ ಏಳು ಸ್ಥಾನಗಳಿಗೆ ಆಯ್ಕೆ ಬಯಸಿ ಸುಮಾರು 300ಕ್ಕೂ ಹೆಚ್ಚು ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ.

ಪಕ್ಷದ ನಿಷ್ಠಾವಂತರಿಗೆ ಆದ್ಯತೆ ನೀಡಲು ತೀರ್ಮಾನಿಸಿರುವ ಹೈಕಮಾಂಡ್, ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಿದವರು, ನಿಗಮ, ಮಂಡಳಿ ಅಧಿಕಾರ ಪಡೆದವರನ್ನು ಈ ಆಯ್ಕೆಗೆ ಪರಿಗಣಿಸದಿರಲು ತೀರ್ಮಾನಿಸಿದೆ. ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವುದನ್ನು ಪಾಲಿಸಲು ತೀರ್ಮಾನಿಸಿದ್ದು ಈಗಾಗಲೇ ನಿಗಮ ಮಂಡಳಿಯಲ್ಲಿ ನೇಮಕಾತಿ ಹೊಂದಿದವರು, ರಾಜಕೀಯ ಕಾರ್ಯದರ್ಶಿಗಳನ್ನು ಪರಿಗಣಿಸದಿರಲು ತೀರ್ಮಾನಿಸಲಾಯಿತು ಎಂದು ಗೊತ್ತಾಗಿದೆ.

ಇದರ ಆಧಾರದಲ್ಲಿ ಇದೀಗ ಸಂಭಾವ್ಯರ ಪಟ್ಟಿ ಸಿದ್ಧಪಡಿಸಿದ್ದು, ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಣ್ಣ ನೀರಾವರಿ ಸಚಿವ ಬೋಸರಾಜು, ಇಸ್ಮಾಯಿಲ್, ಮನೋಹರ್, ಐವನ್ ಡಿಸೋಜಾ ಬಿವಿ ಶ್ರೀನಿವಾಸ್, ರಮೇಶ್ ಬಾಬು, ಬಿ ಎಲ್ ಶಂಕರ್, ವೆಂಕಟೇಶ್ ಇವರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ.

ಸದ್ಯ ಒಡಿಶಾ ಪ್ರವಾಸದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ತಡರಾತ್ರಿ ದೆಹಲಿಗೆ ಹಿಂತಿರುಗುತ್ತಿದ್ದು, ನಾಳೆ ಬೆಳಗ್ಗೆ ಸಭೆ ನಡೆಸಿ ಪಟ್ಟಿಗೆ ಅಂತಿಮ ಮುದ್ರೆ ಒತ್ತಲಿದ್ದಾರೆ.

Leave a Reply