ಪಂಚ ಗ್ಯಾರಂಟಿ ಸಾಮಾನ್ಯ ಜನರಿಗೆ ವರದಾನ

1 year ago

ಅರ್ಹರಿಗೆ ತಲುಪಿಸುವಲ್ಲಿ ಪ್ರಗತಿ ಸಾಧಿಸಿ: ಚಿದಾನಂದಪ್ಪ.ಕೆ.ಇ

ಬಳ್ಳಾರಿ: ರಾಜ್ಯ ಸರ್ಕಾರದ ಮಹತ್ವ ಪೂರ್ಣ ಪಂಚಗ್ಯಾರಂಟಿ ಯೋಜನೆಗಳಿಂದ ಸಾಮಾನ್ಯ ಮತ್ತು ಅಸಹಾಯಕ ಕುಟುಂಬಗಳಿಗೆ ವರದಾನವಾಗಿದ್ದು, ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಶೇ.100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಜಿಲ್ಲಾ ಅಧ್ಯಕ್ಷ ಚಿದಾನಂದಪ್ಪ.ಕೆ.ಇ ಹೇಳಿದರು.

ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಪ್ರಾಧಿಕಾರದಿಂದ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ಯಾರಂಟಿ  ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಗ್ಯಾರಂಟಿ ಯೋಜನೆಗಳ ಲಾಭ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಶೇ.100ರಷ್ಟು ಪ್ರಗತಿ ಸಾಧಿಸಲು ಕ್ರಮವಹಿಸುವ ಮೂಲಕ ರಾಜ್ಯದಲ್ಲಿಯೇ ಮೊದಲ ಸ್ಥಾನ ತಲುಪಬೇಕು ಎಂದರು.

ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ಆಗಸ್ಟ್ 2023 ರಿಂದ ಸೆಪ್ಟಂಬರ್ 2024 ರವರೆಗೆ ರೂ.2,000 ರಂತೆ ಒಟ್ಟು 3762682 ಫಲಾನುಭವಿಗಳಿಗೆ ಮಾಹೆವಾರು ಒಟ್ಟು 752,53,64,00 ರೂ. ಗಳು ಸರ್ಕಾರದಿಂದ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ನೋಂದಾಯಿಸಿರುವ ಎಲ್ಲಾ ಫಲಾನುಭವಿಗಳಿಗೂ ಈ ಯೋಜನೆಯ ಲಾಭ ಒದಗಿಸಲು ಕೆಲ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಶೇ. ನೂರಕ್ಕೆ ನೂರು ಪ್ರಗತಿ ಸಾಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಚಿದಾನಂದಪ್ಪ.ಕೆ.ಇ, ವಿವಿಧ ಕಾರಣಗಳಿಂದ ಫಲಾನುಭವಿಗಳಿಗೆ ಹಣ ಪಾವತಿಯಾಗದಿರುವ ಕುರಿತು ನನ್ನ ಕಚೇರಿಗೆ ಅರ್ಜಿ ಬರುತ್ತಿವೆ, ಇದಕ್ಕೆ ಏನು ಪರಿಹಾರ ಎಂದು ಪ್ರಶ್ನಿಸಿದರು.

ವಿಜಯ್‌ಕುಮಾರ್ ಅವರು ಪ್ರತಿಕ್ರಿಯಿಸಿ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆಗಳಿಗೆ ಭೇಟಿ ನೀಡಿ ತಾಂತ್ರಿಕ ದೋಷವಿರುವ ಇ-ಕೆವೈಸಿ, ಎನ್‌ಪಿಸಿಐ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಲಾಗುತ್ತಿದೆ. ಐಟಿ ಮತ್ತು ಜಿಎಸ್‌ಟಿ ಸಂಬಂಧಿತ ಕಾರಣಗಳಿಂದ ಸೌಲಭ್ಯ ವಂಚಿತರಾದ ಫಲಾನುಭವಿಗಳಿಗೆ ಮರು ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಐಟಿ ಮತ್ತು ಜಿಎಸ್‌ಟಿ ಕಟಾವಣೆ ಮಾಡಿಸದೇ ಇರುವ ದೃಢೀಕರಣ ಪ್ರತಿ ನೀಡಲು ಸಂಬಂಧಪಟ್ಟ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಜುಲೈ 2023 ರಿಂದ ಆಗಸ್ಟ್ 2024 ರವರೆಗೆ ಜಿಲ್ಲೆಯಲ್ಲಿ ಒಟ್ಟು 13958781 ಫಲಾನುಭವಿಗಳಿಗೆ ಇದುವರೆಗೂ ಒಟ್ಟು 223.71 ಕೋಟಿ ರೂ. ಗಳ ಸಹಾಯಧನ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಸಭೆಗೆ ತಿಳಿಸಿದರು.

ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗಳಿಗೆ ವರ್ಗಾವಣೆ ಕುರಿತು ಪಡಿತರ ಫಲಾನುಭವಿಗಳು ವಿಚಲಿತರಾಗುತ್ತಿದ್ದು, ಈ ಕುರಿತು ಅವರಿಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 290480 ಅರ್ಹ ಗ್ರಾಹಕರಿದ್ದು, ಅದರಲ್ಲಿ ಈವರೆಗೆ (ಅ.31 ರ ವರೆಗೆ)  2,80,282 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 10198 ಗ್ರಾಹಕರು ನೋಂದಾಯಿಸಲು ಬಾಕಿಯಿದ್ದಾರೆ. ಸರ್ಕಾರವು 2023ರ ಆಗಸ್ಟ್ನಿಂದ 2024ರ ಅಕ್ಟೋಬರ್ ವರೆಗೆ ಒಟ್ಟು 170.08 ಕೋಟಿ ರೂ. ಪಾವತಿಸಿದೆ ಎಂದು ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಅನಧೀಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿರುವವರನ್ನು ಗುರುತಿಸಿ ವಿದ್ಯುತ್ ಮೀಟರ್ ಸಂಪರ್ಕ ಪಡೆಯಲು ತಿಳಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಜೂನ್-2023 ರಿಂದ ನವೆಂಬರ್-2024 ರವರೆಗೆ ಮಹಿಳಾ ವಯಸ್ಕರು ಮತ್ತು ಮಕ್ಕಳು ಸೇರಿ ಒಟ್ಟು 37358517 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, 135,10,15,030 ರೂ. ಗಳು ಸಾರಿಗೆ ಆದಾಯ ಹೊಂದಲಾಗಿದೆ ಎಂದು ಕ.ಕ.ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದರು.

ಬಸ್‌ಗಳಲ್ಲಿ ಸಂಚರಿಸುವ ವಯಸ್ಕ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುತುವರ್ಜಿ ವಹಿಸಬೇಕು ಎಂದು ಅಧ್ಯಕ್ಷರು ಸೂಚಿಸಿದರು.

ಯುವ ನಿಧಿ ಯೋಜನೆಯಡಿ ನವೆಂಬರ್-2024 ಮಾಹೆವರೆಗೆ ಜಿಲ್ಲೆಯ 18,774 ನಿರುದ್ಯೋಗಿಗಳು ನೋಂದಾಯಿಸಿದ್ದು, ಈವರೆಗೆ 5,54,34,000 ರೂ. ಫಲಾನುಭವಿಗಳಿಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಅವರು ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿ ಹಳ್ಳಿಗಳ ಪ್ರತಿ ಮನೆ ಮನೆಗಳಿಗೆ ತಿಳಿಸಲು ಹಾಗೂ ಅರಿವು ಮೂಡಿಸಲು ಸ್ವಚ್ಛ ಭಾರತ್ ಕಸ ವಿಲೇವಾರಿ ವಾಹನಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದರು.

ಚಿದಾನಂದಪ್ಪ.ಕೆ.ಇ ಮಾತನಾಡಿ, ಅಧಿಕಾರಿಗಳು ತಮ್ಮ ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಬೇಕು. ಸರ್ಕಾರ ಯೋಜನೆಗಳನ್ನು ಜನ ಸಾಮಾನ್ಯರಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಕಾಲದಲ್ಲಿ ಅವರಿಗೆ ಸೇವೆ ಒದಗಿಸಿದಾಗ ಮಾತ್ರ ಯೋಜನೆಗಳಿಗೆ ಸಾರ್ಥಕತೆ ದೊರಕುತ್ತದೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಸರ್ಕಾರದ ಮೇಲೆ ಉತ್ತಮ ಅಭಿಪ್ರಾಯ ಮೂಡುತ್ತದೆ ಎಂದರು.

ಇದಕ್ಕೂ ಮುನ್ನ ಯುವನಿಧಿ ಯೋಜನೆಗೆ ನೋಂದಣಿಗೆ ಮಾಹಿತಿ ಕುರಿತ ಭಿತ್ತಿಚಿತ್ರ ಬಿಡಿಗಡೆಗೊಳಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಸದಸ್ಯರಾದ ಕರಿಬಸಪ್ಪ, ಆಶಾ ಲತಾ ಸೋಮಪ್ಪ, ಗೋನಾಳ್ ನಾಗಭೂಷಣ ಗೌಡ, ನಾಗೇನಹಳ್ಳಿ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಯೋಜನಾಧಿಕಾರಿ ಪ್ರಮೋದ್, ಆಹಾರ ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ ಸೇರಿದಂತೆ ಇತರೆ ಗ್ಯಾರಂಟಿ ಯೋಜನೆಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

Leave a Reply