ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಿತ ಐವರು ಸಿಬ್ಬಂದಿ ಅಮಾನತು

7 months ago

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪ ಆರೋಪದಲ್ಲಿ  ಬೆಂಗಳೂರು ನಗರದ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಿತ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಪ್ರತ್ಯೇಕ ಪ್ರಕರಣಗಳಲ್ಲಿ ಹಲಸೂರು ಗೇಟ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಹಾಗೂ ಕೋರಮಂಗಲ ಠಾಣೆಯ ಇನ್ಸ್‌ಪೆಕ್ಟರ್ ಲೂಯಿರಾಮ ರೆಡ್ಡಿ ಸೇರಿ ಅವರು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪ ಆರೋಪ ಕುರಿತಂತೆ ಆಗ್ನೇಯ ವಿಭಾಗ ಹಾಗೂ ಕೇಂದ್ರ ವಿಭಾಗದ ಡಿಸಿಪಿಯವರ ಪ್ರಾಥಮಿಕ ತನಿಖಾ ವರದಿ ಆಧರಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಹಲಸೂರು ಗೇಟ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂ ವಸೂಲಿಗೆ ಯತ್ನಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಯಿತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹನುಮಂತ ಭಜಂತ್ರಿ ಒಬ್ಬ ಎಎಸ್ಐ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಕೋರಮಂಗಲ ಪ್ರದೇಶ ವ್ಯಾಪ್ತಿಯಲ್ಲಿ ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಡಿ ಕೋರಮಂಗಲ ಠಾಣೆಯ ಇನ್ಸ್‌ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದರು.

ಇತ್ತೀಚೆಗೆ ನಗರದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಕೈಗೊಂಡಾಗ ಅವಧಿ ಅಂತ್ಯವಾದ ನಂತರವೂ ಪಬ್, ಬಾರ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಕಂಡು ಬಂದಿತ್ತು ಎಂದರು.

Leave a Reply