ಶೀಘ್ರದಲ್ಲೇ ನಾಲ್ಕು ವಿಧಾನಪರಿಷತ್ ಸದಸ್ಯರ ನೇಮಕ

1 year ago

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಖಾಲಿಯಿರುವ ನಾಲ್ಕು ನಾಮಕರಣ ಸದಸ್ಯರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಪ್ರಕ್ರಿಯೆ ಆರಂಭಿಸಿದ್ದಾರೆ. ಸ್ಥಾನಾಕಾಂಕ್ಷಿಗಳು ಹುದ್ದೆ ಗಿಟ್ಟಿಸಿಕೊಳ್ಳಲು ಪ್ರಬಲ ಲಾಬಿ ನಡೆಸುತ್ತಿದ್ದಾರೆ.

ನಾಲ್ಕು ಸ್ಥಾನಗಳಿಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಇವರೆಲ್ಲಾ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಹೈಕಮಾಂಡ್ ಕೃಪಾಶೀರ್ವಾದದ ಮೂಲಕ ಹುದ್ದೆ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸುತ್ತಿರುವ ಇವರು, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಗೆ ತಮ್ಮನ್ನು ನಾಮಕರಣ ಮಾಡುವಂತೆ ಕೋರಿ ಕಸರತ್ತು ನಡೆಸುತ್ತಿದ್ದಾರೆ.

ಪ್ರಾದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ಪಕ್ಷ ನಿಷ್ಠೆ ,ತತ್ವ ಸಿದ್ಧಾಂತ ಮತ್ತು ಸಮಾಜ ಸೇವೆ ಅಂಶಗಳನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಂಡಿರುವ ಸಿದ್ದರಾಮಯ್ಯ ಇವುಗಳ ಆಧಾರದಲ್ಲಿಯೇ ನಾಲ್ವರನ್ನು ನಾಮಕರಣ ಮಾಡಲು ಚಿಂತಿಸಿದ್ದಾರೆ.

ಉನ್ನತ ಮೂಲಗಳ ಪ್ರಕಾರ ಪಕ್ಷದ ಹಿರಿಯ ನಾಯಕ ಬಿ ಎಲ್ ಶಂಕರ್, ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ದಲಿತ ಹೋರಾಟಗಾರ ಡಿ ಜಿ ಸಾಗರ್, ಮಾಜಿ ಶಾಸಕರಾದ ನಂಜುಂಡಸ್ವಾಮಿ, ಬಾಲರಾಜು, ರಾಜು ಅಲಗೂರ್, ಎಸ್ ಎಫ್ ಜಕ್ಕಪ್ಪನವರ್, ಯು ಬಿ ವೆಂಕಟೇಶ್ ಸೇರಿದಂತೆ ಹಲವರ ಹೆಸರುಗಳು ಈ ಹುದ್ದೆಗೆ ಪ್ರಮುಖವಾಗಿ ಕೇಳಿ ಬರುತ್ತಿವೆ. ಸಂಭಾವ್ಯರ ಪಟ್ಟಿಯನ್ನು ಸಿದ್ದರಾಮಯ್ಯ ಹೈಕಮಾಂಡ್ ಗೆ ಸಲ್ಲಿಸಿದ್ದಾರೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಪಟ್ಟಿಯನ್ನು ಅನುಮೋದನೆಗಾಗಿ ಸಿದ್ದರಾಮಯ್ಯನವರಿಗೆ ಕಳುಹಿಸಲಿದ್ದಾರೆ ಎಂದು ಗೊತ್ತಾಗಿದೆ.

Leave a Reply