ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲು ಸಕಲ-ಸಿದ್ಧತೆ ಕೈಗೊಳ್ಳಿ: ಮಹಮ್ಮದ್ ಝುಬೇರ್

2 years ago

ಬಳ್ಳಾರಿ: ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಂಭ್ರಮದೊಂದಿಗೆ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝಬೇರ್ ಅವರು ಹೇಳಿದರು.

ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ತಹಶೀಲ್ದಾರರ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನ.01 ರಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಆವರಣದಲ್ಲಿ ಆಯೋಜಿಸಲಾಗುವುದು. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಬಳಿಕ ಧ್ವಜಾರೋಹಣಾ ನೆರವೇರಿಸಿ, ಸಂದೇಶ ನೀಡುವರು ಎಂದರು.

ಗಡಿಭಾಗದ ಬಳ್ಳಾರಿಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಮತ್ತು ಅಚ್ಚುಕಟ್ಟಾಗಿ ಆಚರಿಸಲು ಜಿಲ್ಲಾಡಳಿತದೊಂದಿಗೆ ಪ್ರತಿಯೊಂದು ಇಲಾಖೆ, ಕನ್ನಡ ಪರ ಸಂಘಟನೆಗಳು ಹಾಗೂ ಎಲ್ಲಾ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ಮೊದಲ ಬಾರಿಗೆ ಜಿಲ್ಲೆಯಲ್ಲಿ ಕನ್ನಡ ನಾಡು-ನುಡಿಗೋಸ್ಕರ ಸಾಧನೆಗೈದ ಅರ್ಹರನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲಾಗುವುದು. ಇದಕ್ಕಾಗಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚನೆ ಮಾಡಲಾಗುವುದು. ಸಮಿತಿಯಲ್ಲಿ ಸದಸ್ಯ ಕಾರ್ಯದರ್ಶಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿಯು ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ತಬ್ಧ ಚಿತ್ರದೊಂದಿಗೆ ಅದ್ದೂರಿ ಮೆರವಣಿಗೆ  ನಡೆಯಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ವತಿಯಿಂದ ವಿವಿಧ ಥೀಮ್ ಆಧಾರಿತ ಸ್ತಬ್ಧಚಿತ್ರ ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಸಾಂಸ್ಕೃತಿಕ ವಾದ್ಯಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡುತ್ತವೆ ಎಂದರು.

ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗದಿAದ ಜೈನ್ ಮಾರ್ಕೆಟ್ ರಸ್ತೆ ಮಾರ್ಗವಾಗಿ ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಮುಕ್ತಾಯಗೊಳ್ಳಲಿದೆ ಎಂದರು.

ಇದೇ ಅ.19 ಮತ್ತು 20 ರಂದು ಜಿಲ್ಲೆಗೆ ಕನ್ನಡ ಜ್ಯೋತಿ ರಥ ಆಗಮಿಸಲಿದ್ದು, ವಿಜೃಂಭಣೆಯಿಂದ ಸ್ವಾಗತಿಸಿ ಹಬ್ಬದ ವಾತಾವರಣದಂತೆ ಬೀಳ್ಕೊಡಬೇಕು ಎಂದು ಕೋರಿದರು.

ಕನ್ನಡ ರಾಜ್ಯೋತ್ಸವ ದಿನದಂದು ನಗರದಲ್ಲಿನ ಮೇರು ನಟರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಲಾಗುವುದು. ನವೆಂಬರ್ ಮೊದಲ ವಾರದಂದು ಎಲ್ಲಾ ಸಿನಿಮಾ ಮಂದಿರಗಳಲ್ಲಿ ಕನ್ನಡ ಚಲನಚಿತ್ರ ಪ್ರದರ್ಶಿಸಲು ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸಂಡೂರಿನಲ್ಲಿ ಉಪಚುನಾವಣೆ ನಿಮಿತ್ತ ಮಾದರಿ ನೀತಿ ಸಂಹಿತೆ ಜಾರಿ ಇರುತ್ತದೆ. ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಷಯಗಳಿಗೆ ಆಸ್ಪದ ನೀಡದೆ ಕನ್ನಡ ರಾಜ್ಯೋತ್ಸವವನ್ನು  ವ್ಯವಸ್ಥಿತವಾಗಿ ಆಚರಿಸಲು ಸಹಕರಿಸಬೇಕು. ಯಾವುದೇ ರಾಜಕೀಯ ಪ್ರಚಾರ ಚಟುವಟಿಕೆಗಳಿಗೆ ಅನುಮತಿಯಿರುವುದಿಲ್ಲ ಎಂದರು.

ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಮೊದಲಾದವರು ಹಾಜರಿದ್ದರು.

Leave a Reply