ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಾಗೂ ಸಮಾವೇಶ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ
ಬಳ್ಳಾರಿ: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ನಾಣ್ಣುಡಿಯಂತೆ ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ಸಮಾಜದಲ್ಲಿ ಸಾಧನೆಯ ಶಿಖರವೇರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿಡಿಎಎ ಸಭಾಗಂಣದಲ್ಲಿ ಬುಧವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ, ಲಿಂಗ ತಾರತಮ್ಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಹದಿ ಹರೆಯದ ಹೆಣ್ಣುಮಕ್ಕಳ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರ್ಟಿಇ-2009 ಕಾಯ್ದೆ ಪ್ರಕಾರ ಶಿಕ್ಷಣ ಆಯ್ಕೆಯಲ್ಲ ಅದು ನಮ್ಮ ಹಕ್ಕು. ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕವಾಗಿ ಸಬಲೀಕರಣವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದರು.
ಯೌವನ ಸಮಯದಲ್ಲಿ ಹೆಣ್ಣು ಮಕ್ಕಳು ಯಾವುದೇ ತರಹದ ಆಕರ್ಷಣೆಗೆ ಒಳಗಾಗಿ ತಪ್ಪು ಹಾದಿ ಹಿಡಿಯದೇ, ಜೀವನದ ತಾತ್ಪರ್ಯ ಅರಿತುಕೊಂಡು ಮನೆಗೆ-ಊರಿಗೆ, ಮುಖ್ಯವಾಗಿ ಪೋಷಕರಿಗೆ ಕೀರ್ತಿ ತರುವ ಹಾಗೆ ಉತ್ತಮ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಾಲ್ಯ ವಿವಾಹ, ಲಿಂಗ ತಾರತಮ್ಯ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ನಿರ್ಮೂಲನೆ ಮಾಡಲು ಶಿಕ್ಷಣವು ಮಾರ್ಗವಾಗಿದ್ದು, ಉತ್ತಮ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ ಎಂದರು.
ಮಕ್ಕಳ ರಕ್ಷಣೆಗಾಗಿ ಪ್ರತಿ ಜಿಲ್ಲೆಯಲ್ಲಿಯೂ ಡಿವೈಎಸ್ಪಿ, ಪಿಎಸ್ಐ, ಮಹಿಳಾ ಪೊಲೀಸ್ ಪೇದೆ ಒಳಗೊಂಡAತೆ ವಿಶೇಷ ಮಕ್ಕಳ ಪೊಲೀಸ್ ಘಟಕವಿದ್ದು, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಕಂಡುಬಂದಲ್ಲಿ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣ ಹೆಚ್ಚಾಗುತ್ತಿದ್ದು, ಬಾಲ್ಯ ವಿವಾಹವು ಕಾನೂನು ಬಾಹಿರವಾಗಿದೆ. ಈ ಕುರಿತು ತಮ್ಮ ಮನೆ-ಕುಟುಂಬಗಳಲ್ಲಿ ಮನವರಿಕೆ ಮಾಡಬೇಕು ಎಂದರಲ್ಲದೇ, ಮಕ್ಕಳ ಮೇಲೆ ದೌರ್ಜನ್ಯ, ಬಾಲ್ಯವಿವಾಹ ಹಾಗೂ ಇತರೆ ಸಮಸ್ಯೆ ಇದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ಮಹಿಳಾ ಸಹಾಯವಾಣಿ ಸಂಖ್ಯೆ 181 ಹಾಗೂ ತುರ್ತು ಸಹಾಯವಾಣಿ ಸಂಖ್ಯೆ 112 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಎಲ್ಲಾ ರಂಗಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಎಲ್ಲಾ ರಂಗಗಳಲ್ಲಿ ಹೆಚ್ಚು ಸ್ಥಾನಮಾನ ಹೊಂದುತ್ತಿದ್ದಾರೆ. ಹಾಗಾಗಿ ಸಾಧನೆ ಮಾಡುವ ಹಂಬಲ ಎಲ್ಲರಲ್ಲೂ ಮೂಡಬೇಕು ಎಂದರು.
ಪ್ರಸ್ತುತದಲ್ಲಿ ಪ್ರೇಮ-ವಿವಾಹ ಪ್ರಕರಣಗಳಿಂದ ಹದಿ-ಹರೆಯದವರ ಜೀವನ ಹಾಳಾಗುತ್ತಿದೆ. ಹಾಗಾಗಿ ಹೆಣ್ಣುಮಕ್ಕಳು ಜಾಗೃತರಾಗಬೇಕು. ಶಿಕ್ಷಣದಿಂದ ನಿರ್ದಿಷ್ಠ ಗುರಿ ಹೊಂದಿ, ಸಮಾಜದಲ್ಲಿ ಉನ್ನತ ಸ್ಥಾನ-ಮಾನ ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರತಿಯೊಬ್ಬರೂ ಜವಾಬ್ದಾರಿಯುತ ನಾಗರಿಕನಾಗಬೇಕು. ಸಾಧನೆಗೈದ ಅನೇಕ ಮಹನೀಯರ ದಾರ್ಶನಿಕ ಬದುಕನ್ನು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು. ಇಂತಹ ಸಮಾವೇಶ ಕಾರ್ಯಕ್ರಮದ ಮಹತ್ವ ಹೊಂದಿ, ತಮ್ಮ ಗ್ರಾಮ, ಮನೆ, ಕುಟುಂಬದ ಸದಸ್ಯರಿಗೂ ತಿಳಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶಿವಲೀಲಾ, ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ.ಮೋಹನ ಕುಮಾರಿ, ಕೌಲ್ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಭಾಷ್ ಚಂದ್ರ, ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದರಾಮೇಶ್ವರ ಕಡೇದ, ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಯ್ಯನಗೌಡ ಪಾಟೀಲ್ ಅವರು ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ ಕುಮಾರ್, ಡಿವೈಎಸ್ಪಿ ಹಾಗೂ ಎಸ್ಜೆಪಿಯು ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಚಂದ್ರಕಾಂತ ನಂದಾ ರೆಡ್ಡಿ, ರೈಲ್ವೇ ಪೊಲೀಸ್ ಅಧಿಕಾರಿ ವಿಜಯಲಕ್ಷ್ಮಿ, ಜಿಲ್ಲಾಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ, ರೀಡ್ಸ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕಿ ಕೆ.ಸೀತಾಮಹಾಲಕ್ಷ್ಮಿ, ಕಾರ್ಯಕ್ರಮ ವ್ಯವಸ್ಥಾಪಕ ಜಗತಾಪ್, ತಾಲ್ಲೂಕು ಸಂಯೋಜಕರಾದ ಶಿಲ್ಪಾ, ಕೆ.ಎಂ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು, ಯುವಕ-ಯುವತಿಯರು ಮತ್ತು ಸ್ವ-ಸಹಾಯ ಸಂಘದ ಮಹಿಳೆಯರು, ಇನ್ನಿತರರು ಉಪಸ್ಥಿತರಿದ್ದರು.
ಅರಿವು ಮೂಡಿಸಿದ ಜಿಲ್ಲಾ ಮಟ್ಟದ ಜಾಗೃತಿ ಜಾಥಾ: ಬಾಲ್ಯ ವಿವಾಹ ನಿಷೇಧ, ಲಿಂಗ ತಾರತಮ್ಯ, ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಟ್ಟದ ಜಾಗೃತಿ ಜಾಥಾ ನಡೆಯಿತು. ಜಾಥಾಗೆ ಎಸ್ಪಿ ಕಚೇರಿ ಆವರಣದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಚಾಲನೆ ನೀಡಿದರು.
ಜಾಥಾದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವ-ಸಹಾಯ ಸಂಘ ಸಂಸ್ಥೆಗಳ ಮಹಿಳೆಯರು ಭಾಗವಹಿಸಿ ‘ನಿಲ್ಲಿಸಿ, ನಿಲ್ಲಿಸಿ, ಬಾಲ್ಯ ವಿವಾಹ ನಿಲ್ಲಿಸಿ…’ ‘ಮಕ್ಕಳನ್ನು ಶಾಲೆಗೆ ಕಳುಹಿಸಿ’, ‘ದುಡಿಮೆ ಬೇಡ ಶಾಲೆ ಬೇಕು’ ಎನ್ನುವ ಘೋಷಣೆಗಳನ್ನು ಕೂಗಿದರು.
ಜಾಥಾ ಎಸ್ಪಿ ಕಚೇರಿ ಮುಂಭಾಗದಿಂದ ಗಡಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿ ಕಚೇರಿ ಮೂಲಕ ಬಿಡಿಎಎ ಫುಟ್ಬಾಲ್ ಮೈದಾನದ ವೇದಿಕೆ ಕಾರ್ಯಕ್ರಮದವರೆಗೆ ತಲುಪಿತು.




