ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ಬರ ಪರಿಹಾರ ಮತ್ತು ಕೃಷಿ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ರೈತರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಡಿಸಿಎಂ ಡಿ ಕೆ ಶಿವಕುಮಾರ್ ಅವರೊಂದಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ ಬಿತ್ತನೆ ಬೀಜ ಲಭ್ಯವಿರುವ ಕಡೆ ಗಮನ ಹರಿಸಲು ಸಲಹೆ ನೀಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಬಹಳಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅಧಿಕಾರಿಗಳು ಪ್ರತಿಯೊಂದಕ್ಕೂ ನೀತಿ ಸಂಹಿತೆ ನೆಪ ಹೇಳುತ್ತಿದ್ದು, ಆಡಳಿತ ವ್ಯವಸ್ಥೆ ದಿಕ್ಕು ತಪ್ಪಿದಂತಾಗಿದೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡಿದಂತೆ ಆಡಳಿತ ಯಂತ್ರಕ್ಕೆ ಚುರುಕು ನೀಡುವ ಕಡೆ ಗಮನಹರಿಸುವಂತೆ ತಾಕಿದ್ದು ಮಾಡಿದ್ದಾರೆ.
ಬರ ನಿರ್ವಹಣೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಕೆಲವು ಬ್ಯಾಂಕುಗಳು ಈ ಹಣವನ್ನು ರೈತರ ಸಾಲಕ್ಕಾಗಿ ಜಮಾ ಮಾಡಿಕೊಳ್ಳುತ್ತಿವೆ. ಯಾವುದೇ ಕಾರಣಕ್ಕೂ ಈ ರೀತಿ ಮಾಡಬಾರದು. ಪರಿಹಾರ ಹಣ ರೈತರಿಗೆ ನೀಡಬೇಕು ಎಂದು ಬ್ಯಾಂಕ್ ಗಳಿಗೆ ಸೂಚಿಸಿದರು.
ಮೇವು ಲಭ್ಯತೆ, ಗೋ ಶಾಲೆಗಳ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಕೇಂದ್ರ ಸರ್ಕಾರದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಎಲ್ಲಿಯೂ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನೀತಿ ಸಂಹಿತೆ ನೆಪದಲ್ಲಿ ಆಡಳಿತ ಯಂತ್ರ ತಟಸ್ಥವಾಗುವುದು ಸಹನೀಯವಲ್ಲ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸಕಾಲಿಕವಾಗಿ ಸ್ಪಂದಿಸಬೇಕು. ಈಗಾಗಲೇ ಚುನಾವಣೆ ಮುಗಿದಿರುವುದರಿಂದ ಚುನಾವಣಾ ಕರ್ತವ್ಯ ನಿಯೋಜನೆ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ತಿರುಗಾಡಿ ಕಾಲಾಹರಣ ಮಾಡುವುದು ಸರಿಯಲ್ಲ ಎಂದರು.
ಸಚಿವರು, ಶಾಸಕರು ಪ್ರಶ್ನಿಸುವುದಿಲ್ಲ ಎಂಬ ಕಾರಣಕ್ಕಾಗಿ ಮನಸೋ ಇಚ್ಛೆ ನಡೆದುಕೊಳ್ಳುವುದನ್ನು ಗಮನಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.
ಗುತ್ತಿಗೆದಾರರ ಬಿಲ್ ಬಾಕಿ ಪಾವತಿ ಮಾಡಲು ಚುನಾವಣೆ ಆಯೋಗ ಅನುಮತಿ ನೀಡಿದೆ. ಅದೇ ರೀತಿಯಲ್ಲಿ ಹೊಸ ಕಾಮಗಾರಿಗಳ ಟೆಂಡರ್ ಕರೆಯಲು ಕೂಡ ಅನುಮತಿ ನೀಡಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಚುನಾವಣಾ ಆಯೋಗದ ಜೊತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.




