ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಸರ್ಕಾರ ಸರ್ವ ಸನ್ನದ್ಧ: ಪ್ರಿಯಾಂಕ್ ಖರ್ಗೆ

2 years ago

ಕಲಬುರಗಿ: ಕಲಬುರಗಿ ಜಿಲ್ಲೆಯ ನಾಗಾವಿ, ಸನ್ನತಿ, ಕಾಳಗಿ, ಮಳಖೇಡ, ಶಹಬಾದ್‌, ಫಿರೋಜಾಬಾದ್‌, ಹಂಪಾಪುರ, ಕನಗನಹಳ್ಳಿಗಳು ಐತಿಹಾಸಿಕ ಸ್ಮಾರಕಗಳನ್ನು ಹೊಂದಿದ್ದು, ಈ ಸ್ಮಾರಕಗಳನ್ನು ಮರಳಿ ಹಿಂದಿನ ರೂಪಕ್ಕೆ ತರುವುದರೊಂದಿಗೆ ಮುಂದಿನ ಪೀಳಿಗೆಗಾಗಿ ಈ ಸ್ಥಳಗಳನ್ನು ಸಂರಕ್ಷಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವುದರೊಂದಿಗೆ ಈ ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸುವ ಕುರಿತು ಇಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆ ರೂಪಿಸುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಳಗಿಯಲ್ಲಿನ ನರಸಿಂಹಸ್ವಾಮಿ, ಸೂರ್ಯನಾರಾಯಣಸ್ವಾಮಿ ಹಾಗೂ ಕಾಳೇಶ್ವರ ದೇಗುಲಗಳು ಐತಿಹಾಸಿಕ ಮಹತ್ವವನ್ನು ಹೊಂದಿದ್ದು, ಸಾವಿರಾರು ಮಂದಿ ಈ ದೇಗುಲಗಳಿಗೆ ಭೇಟಿ ನೀಡುತ್ತಿರುತ್ತಾರೆ ಎಂದರು.

ಈ ಸ್ಥಳಗಳನ್ನು ರಕ್ಷಣೆ ಮಾಡಿ, ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಹೋಳಕುಂದಾದ ಬಳಿ 28 ಎಕರೆ ವ್ಯಾಪ್ತಿಯಲ್ಲಿರುವ ಗುಮ್ಮಟಗಳನ್ನು ಸಂರಕ್ಷಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇತಿಹಾಸದ ಬಗ್ಗೆ ಕುತೂಹಲ ಇರುವವರಿಗೆ ಇಲ್ಲಿನ ಐತಿಹಾಸಿಕ ಮಹತ್ವವನ್ನು ದಾಖಲಿಸಲು ಸಹಕಾರ ನೀಡಲಾಗುವುದು. ಹಾಗೂ ಈ ಸ್ಥಳಗಳಲ್ಲಿ ಪ್ರವಾಸೋದ್ಯಮ ದೃಷ್ಟಿಯಿಂದ ರಸ್ತೆ, ನೀರು, ಶೌಚಾಲಯ ಮತ್ತಿತರ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವುದಕ್ಕೆ ನಮ್ಮ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಹೇಳಿದರು.

Leave a Reply