76 ನೇ ಗಣರಾಜ್ಯೋತ್ಸವ
ಸಂವಿಧಾನದ ಆಶಯಗಳನ್ನು ನೆಲೆಗೊಳಿಸಲು ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆದಿವೆ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಬೆಂಗಳೂರು: ಕರ್ನಾಟಕ ಸರ್ಕಾರ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ, ಒಕ್ಕೂಟ ಸಿದ್ಧಾಂತಗಳ ರೀತಿ ರಿವಾಜುಗಳಿಗೆ ಬದ್ಧವಾಗಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂವಿಧಾನದ ಮಹತ್ವದ ಆಶಯವಾದ ಸಾಮಾಜಿಕ, ಆರ್ಥಿಕ ನ್ಯಾಯ ನೆಲೆಗೊಳಿಸಲು ಶಕ್ತಿ ಮೀರಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಐದು ಗ್ಯಾರಂಟಿ ಕಲ್ಯಾಣ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿವೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಗುಣಗಾನ ಮಾಡಿದರು.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
76 ನೇ ಗಣರಾಜ್ಯೋತ್ಸವ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
76 ವರ್ಷಗಳ ಹಿಂದೆ ಇದೇ ದಿನದಂದು ಭಾರತೀಯರಾದ ನಾವು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದ ಮೂಲಕ ಈ ದೇಶದಲ್ಲಿ ಸಾಮ್ರಾಜ್ಯಶಾಹಿ, ವಸಾಹತುಶಾಹಿ ಆಡಳಿತಕ್ಕೆ ಇತಿಶ್ರೀ ಹಾಡಿ ಜನಾಡಳಿತದ ಹೊಸ ಪರ್ವ ಪ್ರಾರಂಭಿಸಿದೆವು. ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚಿಸಿದ ಎಲ್ಲ ಮಹನೀಯರನ್ನು ಸ್ಮರಿಸೋಣ ಎಂದರು.
ವಿವಿಧ ಗ್ಯಾರೆಂಟಿ ಯೋಜನೆಯಡಿ ಆರ್ಥಿಕ ನೆರವು: ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ.ಗಳಂತೆ 2023 ರ ಆಗಸ್ಟ್ನಿಂದ ಇಲ್ಲಿಯವರೆಗೆ ಒಟ್ಟು 35,180.20 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ.
ಗೃಹಜ್ಯೋತಿ ಯೋಜನೆಯಡಿ 1.62 ಗ್ರಾಹಕರು ಪ್ರಯೋಜನ ಪಡೆಯುತ್ತಿದ್ದು ವಿದ್ಯುತ್ ಸರಬರಾಜು ಕಂಪನಿಗಳಿಗೆ 13,409 ಕೋಟಿ ರೂ.ಸಬ್ಸಿಡಿ ಮೊತ್ತ ನೀಡಲಾಗಿದೆ.
ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ 9,051 ಕೋಟಿ ರೂ. ವಿನಿಯೋಗಿಸಲಾಗಿದೆ.
ಯುವನಿಧಿ ಯೋಜನೆಯಡಿ 2,18,214 ಜನ ನೋಂದಣಿ ಮಾಡಿಕೊಂಡಿದ್ದು ಈವರೆಗೆ 1,24,176 ಅರ್ಹರಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
ಯುವನಿಧಿ ಪ್ಲಸ್ ಉಪಕ್ರಮದಡಿ ಯುವಜನರ ಉದ್ಯೋಗ ಸಾಮರ್ಥ್ಯ ಹೆಚ್ಚಿಸಲು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದರು.
ಜನರ ಹಸಿವನ್ನು ನೀಗಿಸುವ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಪ್ರತಿ ಸದಸ್ಯರಿಗೆ 170 ರೂ.ಗಳಂತೆ 4,48,12,382 ಫಲಾನುಭವಿಗಳಿಗೆ 9,775 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ ಎಂದರು.
ರಾಜ್ಯದ ಹಣಕಾಸು ವ್ಯವಸ್ಥೆ ಉತ್ತಮವಾಗಿ ನಿರ್ವಹಿಸಿರುವ ಆದಾಯ ಸಂಗ್ರಹದಲ್ಲಿ ಶೇ.13 ರಷ್ಟು ಪ್ರಗತಿ ಸಾಧಿಸಿದೆ. ರಾಜ್ಯಗಳು ಸಂಗ್ರಹಿಸುವ ಜಿಎಸ್ಟಿ ಆದಾಯದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಬಲಪಡಿಸಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 13 ಸಾವಿರಕ್ಕೂ ಅಧಿಕ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು.
ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಹಾಸನದಲ್ಲಿ 142 ಕೋಟಿ ರೂ.ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಕಲಬುರ್ಗಿಯಲ್ಲಿ 54 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಆಸ್ಪತ್ರೆ, ಕೆಕೆಆರ್ಡಿಬಿಯ 304 ಕೋಟಿ ರೂ.ವೆಚ್ಚದಲ್ಲಿ ಜಯದೇವ ಹೃದ್ರೋಗ ಹಾಗೂ ಸಂಶೋಧನಾ ಸಂಸ್ಥೆ ನಿರ್ಮಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಕಾಪಾಡಿಕೊಳ್ಳಲು ರಾಜ್ಯದಲ್ಲಿ 79 ಪ್ರಯೋಗಾಲಗಳನ್ನು ಸ್ಥಾಪಿಸಲಾಗಿದೆ ಎಂದರು.
ರಾಜ್ಯದ ಸಮತೋಲಿತ, ಸಮಗ್ರ ಅಭಿವೃದ್ಧಿಗಾಗಿ ಡಾ.ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಮಾಡಲಾಗಿದೆ. ಉದ್ದೇಶಿತ ಗುರಿಗಳ ಸಾಧನೆ ಮಾಡಲಾಗಿದೆಯೆ ಎಂಬುದನ್ನು ಅರಿಯಲು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂವಿಧಾನದ 371(ಜೆ) ಅನುಚ್ಛೇದ ಜಾರಿಗೊಳಿಸಲಾಗಿದೆ ಎಂದರು.
ಬೆಂಗಳೂರು ಮೆಟ್ರೊ ರೈಲು ಯೋಜನೆಯ ಹಂತ 2 ಎ ದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡಿನಿಂದ ಕೃಷ್ಣರಾಜಪುರದವರೆಗೆ, ಹಂತ 2 ಬಿ ಯಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಒಟ್ಟು 58 ಕಿ.ಮೀ.ಉದ್ದದ ಕಾಮಗಾರಿಯನ್ನು 14,788 ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಹಂತ 3ರಲ್ಲಿ 76 ಕಿ.ಮೀ.ಉದ್ದದ ಕಾಮಗಾರಿಯನ್ನು 15,611 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ ಎಂದರು.
ರೈತರ ಆದಾಯ ಹೆಚ್ಚಿಸಲು ಕಾರ್ಬನ್ ಹೀರಿಕೊಳ್ಳುವ ತೋಟಗಾರಿಕೆ ಬೆಳೆಗಳನ್ನು ಗುರುತಿಸುವ ಕಾರ್ಬನ್ ಕ್ರೆಡಿಟ್ ಫ್ರೇಮ್ವರ್ಕ್ (ಸಿಸಿಎಫ್) ಹೊಸ ಕಾರ್ಯಕ್ರಮ ಪರಿಚಯಿಸಲಾಗಿದೆ ಎಂದರು.
2024-25 ನೇ ಸಾಲಿನಲ್ಲಿ ಸುಮಾರು ರೂ. 16,700 ಕೋಟಿಗೂ ಅಧಿಕ ಮೊತ್ತದ ಅಲ್ಪಾವಧಿ ಬೆಳೆ ಹಾಗೂ ಮಧ್ಯಮ ಮತ್ತು ದೀರ್ಘಾವಧಿ ಕೃಷಿ ಸಾಲಗಳನ್ನು ವಿತರಿಸಲಾಗಿದೆ. ಹಾಲು ಉತ್ಪಾದಕರ ಪ್ರೋತ್ಸಾಹ ಯೋಜನೆಯಡಿ ರಾಜ್ಯದ ಸುಮಾರು 9 ಲಕ್ಷ ಹಾಲು ಉತ್ಪಾದಕರಿಗೆ 1124 ಕೋಟಿ ರೂ. ಪ್ರೋತ್ಸಾಹ ಧನ ವರ್ಗಾವಣೆ ಮಾಡಲಾಗಿದೆ ಎಂದರು.
ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ಒತ್ತು: ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಯೋಗದೊಂದಿಗೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಎಂದರು.
ದೇಶದಲ್ಲಿಯೇ ಮೊದಲ ಬಾರಿಗೆ ಕೆಎಸ್ಆರ್ಟಿಸಿ ನೌಕರರಿಗೆ 1 ಕೋಟಿ ರೂ.ಮೌಲ್ಯದ ಅಪಘಾತ ವಿಮಾ ಯೋಜನೆ ಸೌಲಭ್ಯ ಒದಗಿಸಲಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತಿತರರು ಹಾಜರಿದ್ದರು.
ದೇಶದ ಐಕ್ಯತೆ,ಸಮಗ್ರತೆ ಬಿಂಬಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು: ಬೆಂಗಳೂರಿನ ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ ಸುಮಾರು 800 ಮಕ್ಕಳು ಪ್ರದರ್ಶಿಸಿದ ನಾವೆಲ್ಲರೂ ಒಂದೇ ನಾವು ಭಾರತೀಯರು, 4/8 ಗೋರ್ಖಾ ರೈಫಲ್ಸ್ನ ಖುಕ್ರಿ ನೃತ್ಯ, ಪಂಜಾಬ್ ಪರಂಪರೆ ಬಿಂಬಿಸುವ ಭಾಂಗ್ರ ನೃತ್ಯ, ಹೇರೋಹಳ್ಳಿ ಸಂಯುಕ್ತ ಪ.ಪೂ.ಕಾಲೇಜಿನ 600 ಮಕ್ಕಳಿಂದ ಅರಿವೇ ಅಂಬೇಡ್ಕರ್ ನೃತ್ಯರೂಪಕ, ಮೈಸೂರು ಕೆಎಸ್ಆರ್ಪಿ ಮೌಂಟೆಡ್ ಪೊಲೀಸ್ ತಂಡದ ಟೆಂಟ್ ಪೆಗ್ಗಿಂಗ್, ಪೊಲೀಸ್ ಗರುಡ ಪಡೆಯಿಂದ ಭಯೋತ್ಪಾದಕರಿಂದ ಹೈಜಾಕ್ ಆದ ಬಸ್ ಪ್ರಯಾಣಿಕರ ರಕ್ಷಣೆ ಸೇರಿದಂತೆ ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವ ಅಂಶಗಳನ್ನು ಸಾರಿದವು. ವಿವಿಧ ತುಕಡಿಗಳು ನಡೆಸಿದ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು.




