ಪಿಂಚಣಿ ಹಣದ ಮೇಲೆ 60 ಪರ್ಸೆಂಟ್ ಸರ್ಕಾರದ ಕಣ್ಣು ಬಿದ್ದಿದೆ: ಸುನಿಲ್ ಕುಮಾರ್

10 months ago

ಬೆಂಗಳೂರು: ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ ಪಿಂಚಣಿ ರದ್ದುಪಡಿಸಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಆರೋಪಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ ಫಲಾನುಭವಿಗಳನ್ನು ಅರ್ನಹರೆಂದು ಘೋಷಿಸಿದ್ದು, ಇವರ ಪಿಂಚಣಿಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಆದೇಶ ನೀಡಿದೆ ಎಂದರು.

ಬಡವರ ಬಗ್ಗೆ ಕಾಳಜಿ, ಸಹಾನುಭೂತಿ ಇರಲಿ ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರವಚನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ಬಡವರ ಮೇಲೆ ಪ್ರಹಾರ ಮಾಡಲು ಹೊರಟಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ 60 ಪರ್ಸೆಂಟ್ ಸರ್ಕಾರದ ಕಣ್ಣು ಬಿದ್ದಿದೆ ಎಂದರು.

ರಾಜ್ಯದಲ್ಲಿ ಒಟ್ಟು 21.87 ಲಕ್ಷ ವೃದ್ಧಾಪ್ಯ ಹಾಗೂ 31.33 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರನ್ನು ಹುಡುಕುವುದಕ್ಕೆ ಸರ್ಕಾರ ಮುಂದಾಗಿದೆ. 9.04 ಲಕ್ಷ ವೃದ್ಧಾಪ್ಯ ವೇತನದಾರರು 14.15 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್ಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದರು.

ತಮ್ಮದು ಆಲಿಸುವ ಸರ್ಕಾರ ಎಂದು ಜಾಹೀರಾತಿನಲ್ಲಿ ಫೋಸು ಕೊಡುವ ಕಾಂಗ್ರೆಸ್ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ. ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು.

Leave a Reply