ಸರ್ಕಾರ ಜ್ಞಾನಗಂಗೆಯ ಆಲಯಗಳನ್ನು ಬರಿದು ಮಾಡಿ ಅಕ್ಷರ ದೀವಿಗೆಯನ್ನು ನಂದಿಸಲು ಹೊರಟಿದೆ‌: ವಿಜಯೇಂದ್ರ

1 year ago

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನ ಶಿಕ್ಷಣ ಭಾಗ್ಯವನ್ನು ಕಸಿಯುವ ಕ್ರಮವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜ್ಞಾನಗಂಗೆಯ ಆಲಯಗಳನ್ನು ಬರಿದು ಮಾಡಿ ಅಕ್ಷರ ದೀವಿಗೆಯನ್ನು ನಂದಿಸಲು ಹೊರಟಿದೆ‌ ಎಂದಿದ್ದಾರೆ.

ರಾಜ್ಯದ 9 ವಿಶ್ವವಿದ್ಯಾಲಯಗಳಿಗೆ ಬೀಗ ಜಡಿಯಲು ಹೊರಟು ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ ಎಂದಿದ್ದಾರೆ.

ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ ಸರಳವಾಗಿ, ಸುಲಭವಾಗಿ ದೊರೆಯಬೇಕು ಎಂಬ ಮಹತ್ವದ ಉದ್ದೇಶದಿಂದ 9 ವಿಶ್ವವಿದ್ಯಾಲಯಗಳನ್ನು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿತ್ತು. ಇವುಗಳ ಅಭಿವೃದ್ಧಿಗಾಗಿ ಮೀಸಲಿರಿಸಬೇಕಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿಕೊಳ್ಳುವ ಕಾರಣಕ್ಕಾಗಿ ವಿ.ವಿ.ಗಳನ್ನು ಮುಚ್ಚಲು ಹೊರಟಿರುವ ನಿರ್ಧಾರ ಶಿಕ್ಷಣ ಹಾಗೂ ಅಭಿವೃದ್ಧಿ ವಿರೋಧಿಯ ಧೋರಣೆಯನ್ನು ಸಾಕ್ಷಿಕರಿಸುತ್ತಿದೆ ಎಂದಿದ್ದಾರೆ.

ಇತಿಹಾಸದಿಂದಲೂ ದಕ್ಷಿಣ ಭಾರತದಲ್ಲಿ ‘ಕರ್ನಾಟಕ ರಾಜ್ಯ ಶಿಕ್ಷಣದ ಕಾಶಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದಕ್ಕೆ ಹಿನ್ನಡೆಯುಂಟುಮಾಡುವ ನಿರ್ಧಾರಗಳನ್ನು ಈ ಹಿಂದಿನ ಯಾವ ಸರ್ಕಾರಗಳೂ ಕೈಗೊಂಡಿರಲಿಲ್ಲ. ಆದರೆ, ಈ ಕಾಂಗ್ರೆಸ್ ಸರ್ಕಾರ ಇಂಥಾ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಖಂಡನೀಯ ಕ್ರಮವಾಗಿದೆ ಎಂದಿದ್ದಾರೆ. 

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪಡೆಯಲು ಸಂಕಷ್ಟ ಎದುರಿಸುತ್ತಿದ್ದ ವಿವಿಧ ಪ್ರದೇಶಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆರೆಯಲಾಗಿದ್ದ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಂಡ್ಯ, ಮಹಾರಾಣಿ ಕ್ಲಸ್ಟರ್, ನೃಪತುಂಗ ಸೇರಿದಂತೆ ಇತರ ಹಿಂದುಳಿದ ಪ್ರದೇಶಗಳ ವಿಶ್ವವಿದ್ಯಾಲಯಗಳನ್ನು ಮುಚ್ಚಿಸಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ಹಿಂದಿನ ಯೋಚನೆ ಶಿಕ್ಷಣ ವಿರೋಧಿ ನೀತಿಯ ವಿಕೃತ ನಡೆಯಾಗಿದೆ ಎಂದಿದ್ದಾರೆ.

Leave a Reply