ಜೀತ ನಿರ್ಮೂಲನೆಗೆ ಸರ್ಕಾರದ ಯೋಜನೆಗಳ ಸಹಾಯ: ಮಹಾವೀರ ಮ.ಕರೆಣ್ಣವರ

1 year ago

ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ

ದಾವಣಗೆರೆ: ಸರ್ಕಾರದ ಯೋಜನೆಗಳಿಂದ ಬಡವರೂ ಸಹ ಬದುಕನ್ನು ಕಟ್ಟಿಕೊಂಡಿದ್ದು ಜೀತ ಪದ್ದತಿ ನಿರ್ಮೂಲನೆಗೂ ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಹಾಗೂ ಕರ್ನಾಟಕ ಮುಕ್ತಿ ಆಲಯನ್ಸ್ ಸಹಯೋಗದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ಜಾಗೃತಿ ಜಾಥಾ ಹಾಗೂ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ದಿನಮಾನದಲ್ಲಿ ಶ್ರೀಮಂತರಿಂದ ಹಣ ಪಡೆದು ಹಣ ತೀರುವಳಿಗೆ ಕೆಲಸ ಮಾಡುವ ಪದ್ದತಿ ಇತ್ತು. ಆದರೆ ಈಗ ಕಾಲ ಬದಲಾಗಿದೆ. ಇದಕ್ಕೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಬಡವರು  ಉತ್ತಮ ಬದುಕನ್ನು ಕಟ್ಟಿಕೊಳ್ಳುವಂತಾಗಿದೆ. ಕಾರ್ಮಿಕ ಇಲಾಖೆಯಿಂದ  ಕಾರ್ಮಿಕ ಗುರುತಿನ ಚೀಟಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಹ ಧನ, ಉಚಿತ ಆರೋಗ್ಯ ವಿಮೆ, ಮುಂತಾದ ಸೌಲಭ್ಯಗಳನ್ನು ಜನ ಬಳಸಿಕೊಳ್ಳುವ ಮೂಲಕ ಇನ್ನೊಬ್ಬರ ಮೇಲೆ ಅವಲಂಬನೆಯಾಗದೇ ಕಾನೂನಿನ ಚೌಕಟ್ಟಿನಲ್ಲಿ ವಿವಿಧ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಸಂಪೂರ್ಣವಾಗಿ ಜೀತ ಪದ್ದತಿ ನಿರ್ಮೂಲನೆ  ಮಾಡಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀತ ಪದ್ದತಿ ಕಂಡು ಬಂದಿರುವುದಿಲ್ಲ. ಜೀತ ಕಾರ್ಮಿಕರು ಕಂಡು ಬಂದರೆ ಅವರಿಗೆ  ವಸತಿ ಕಲ್ಪಿಸುವುದು, ಸ್ವ ಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ, ವಿದ್ಯಾಭ್ಯಾಸ,  ಉದ್ಯೋಗ ಹಾಗೂ ಬ್ಯಾಂಕ್ಗ ಳಲ್ಲಿ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಮೂಲಕ ಕಾರ್ಯಕ್ರಮಗಳ ಅನುಷ್ಟಾನ ಮಾಡಲಾಗುತ್ತಿದೆ ಎಂದರು. 

ಜಿಲ್ಲೆಯಲ್ಲಿ ಜೀತ ಪದ್ದತಿ ನಿರ್ಮೂಲನಾ ಸಮಿತಿ ರಚನೆ ಮಾಡಲಾಗಿದೆ. ಜಿಲ್ಲಾ ಮಟ್ಟದ ಸಮಿತಿಯಲ್ಲಿ ನ್ಯಾಯಾಧೀಶರು ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿ ಜೀತಪದ್ಧತಿ ಕುರಿತು ಬರುವ ದೂರುಗಳನ್ನು ಪರಿಶೀಲಿಸಿ ಅಗತ್ಯ ಕ್ರಮವನ್ನು ತೆಗೆದುಕೊಂಡು ಜಿಲ್ಲೆಯಲ್ಲಿ  ಜೀತ ಪದ್ದತಿ ಸಂಪೂರ್ಣ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಕೀಲ ಸಂಘದ ಅಧ್ಯಕ್ಷ ಎಲ್.ಹೆಚ್ ಅರುಣಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಬಿ, ಯೋಜನಾ ನಿರ್ದೇಕರಾದ ರೇಷ್ಮ ಕೌಸರ್, ಮುಕ್ತಿ ಅಲಯನ್ಸ್ ಸಂಚಾಲಕರಾದ ಬೃಂದಾ ಅಡಿಗ, ಕ್ರೀಸ್ಟೋಫರ್ ಸ್ಪ್ಯಾನಿ, ರಾಜೇಂದ್ರನ್  ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

Leave a Reply