ಪೊಲೀಸ್ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ಜಿ.ಪರಮೇಶ್ವರ್

2 years ago

ಬೆಂಗಳೂರು: ಪೊಲೀಸ್ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅಂತರ್ಜಿಲ್ಲಾ ವರ್ಗಾವಣೆಗೆ ಪ್ರತ್ಯೇಕ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಚಾತಕಪಕ್ಷಿಗಳಂತೆ ಕಾಯುತ್ತಿರುವ ಖಾಕಿ ಪಡೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದಂತಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಿಂದ ಬಂದು ಬೆಂಗಳೂರಿನಲ್ಲಿ ಪೊಲೀಸ್ ಸೇವೆಯಲ್ಲಿ ಸೇರಿದವರಿಗೆ ಮರಳಿ ತವರಿನತ್ತ ಹೋಗಲು ಅವಕಾಶ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ನಿಯಮ ರೂಪಿಸಲಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆ, ಪೋಷಕರ ಅವಲಂಬನೆ, ಪತಿ-ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆಗೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ಪರಿಷ್ಕರಿಸುವುದಾಗಿ ಹೇಳಿದರು.

ದೇಶಾದ್ಯಂತ ನೂತನ ಅಪರಾಧ ಮತ್ತು ನ್ಯಾಯ ಕಾನೂನುಗಳು ದೇಶಾದ್ಯಂತ ಜಾರಿಯಾಗುತ್ತಿದೆ. ರಾಜ್ಯ ಸರ್ಕಾರ ಅವುಗಳ ಅನುಷ್ಠಾನಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಹೀಗಾಗಿ ಎಲ್ಲಿಯೂ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಇರುವುದಿಲ್ಲ ಎಂದರು.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಈಗಾಗಲೇ ಹಗರಣದ ಬಗ್ಗೆ ಎಸ್ಐಟಿ ಮತ್ತು ಸಿಬಿಐನಿಂದ ಪ್ರತ್ಯೇಕವಾದ ತನಿಖೆ ನಡೆಯುತ್ತಿದೆ. ವರದಿ ಬರುವವರೆಗೂ ಯಾರ ಪಾತ್ರದ ಬಗ್ಗೆಯೂ ಸ್ಪಷ್ಟತೆ ಇಲ್ಲ. ತನಿಖೆ ಪೂರ್ಣಗೊಳ್ಳುವವರೆಗೂ ತಾಳೆಯಿಂದ ಇರಿ ಎಂದು ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದರು.

ಸಿಬಿಐನವರು ಬ್ಯಾಂಕಿನಲ್ಲಾಗಿರುವ ಹಗರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎಸ್ಐಟಿ ಇಲಾಖೆ ಲೋಪಗಳ ಬಗ್ಗೆ ವಿಚಾರಣೆ ನಡೆಸುತ್ತದೆ. ಈ ಎರಡೂ ತನಿಖೆಯ ವರದಿಗಳು ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಅದು ಅಧಿಕಾರಿಗಳೇ ಇರಲಿ, ರಾಜಕಾರಣಿಗಳೇ ಇರಲಿ, ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ ಎಂದರು.

ಡಿಸಿಎಂ ಹುದ್ದೆಗಾಗಿ ನಮಲ್ಲಿ ಯಾವುದೇ ಕಿತ್ತಾಟಗಳಿಲ್ಲ. ಜನಾದೇಶ ನೀಡಿದಂತೆ ನಮ್ಮ ಸರ್ಕಾರ ಅಭಿವೃದ್ಧಿ ಕೆಲಸದತ್ತ ಗಮನಹರಿಸಿದೆ. ಬಿಜೆಪಿಯವರು ಅನಗತ್ಯವಾಗಿ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೀರಾವರಿ, ರಸ್ತೆ ಅಭಿವೃದ್ಧಿ, ಕಂದಾಯ ಇಲಾಖೆ ಸೇರಿದಂತೆ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಿಂತಿಲ್ಲ. ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನೂ ಕೂಡ ಮುಂದುವರೆಸಲಾಗಿದೆ. ಬಿಜೆಪಿ ನಾಯಕರ ನಡುವೆ ಹೊಂದಾಣಿಕೆ ಇಲ್ಲ. ಪರಸ್ಪರ ಅವರೇ ಕಚ್ಚಾಡುತ್ತಿದ್ದಾರೆ. ನಮ್ಮ ಬಗ್ಗೆ ಹೇಳಿಕೆ ನೀಡುವುದು ಹಾಸ್ಯಾಸ್ಪದ ಎಂದರು.

Leave a Reply