ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ
ಬಳ್ಳಾರಿ: ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳಡಿ ವಿಶೇಷಚೇತನರಿಗಾಗಿಯೇ ಮೀಸಲಿರಿಸಿದ ಶೇ.05 ಅನುದಾನ ಪರಿಪೂರ್ಣವಾಗಿ ಬಳಸಿ, ಅವರ ಏಳ್ಗೆಗಾಗಿ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ 2016 ರ ಅನುಷ್ಠಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷಚೇತನರ ಸಮುದಾಯದಲ್ಲಿ 21 ರೀತಿಯ ವಿವಿಧ ಅಂಗವಿಕಲ ವೈಫಲ್ಯತೆ ಕಾಣಬಹುದು. ಅವರ ಕಷ್ಟಕರ ಜೀವನ ಊಹಿಸಲಾರದು. ಹಾಗಾಗಿ ಕಾನೂನುಬದ್ಧವಾಗಿ ಅವರಿಗಿರುವ ಸೌಲಭ್ಯಗಳನ್ನು ತಲುಪಿಸುವ ಮೂಲಕ ಅಧಿಕಾರಿಗಳು ದಾರಿದೀಪವಾಗಬೇಕು ಎಂದರು.
ವಿಶೇಷಚೇತನರಿಗೆ ಶಿಕ್ಷಣ ವೈಯಕ್ತಿಕ ಮತ್ತು ವೃತ್ತಿಪರ ಬೆಳವಣಿಗೆಯ ಅಡಿಪಾಯವಾಗಿದೆ. ಹಾಗಾಗಿ ಜಿಲ್ಲೆಯಲ್ಲಿನ ಶಾಲೆಗಳಲ್ಲಿ ದೃಷ್ಟಿಹೀನ ಮತು ಕಿವುಡ ವಿದ್ಯಾರ್ಥಿಗಳಿಗೆ ಬ್ರೈಲ್ ಸ್ಪರ್ಶ ಬರವಣಿಗೆ ವ್ಯವಸ್ಥೆ ಮಾಡಬೇಕು. ಇದರಿಂದ ಸ್ಪರ್ಶದ ಮೂಲಕ ಓದಲು ಮತ್ತು ಬರೆಯಲು ಅನುವು ಮಾಡಿಕೊಡುತ್ತದೆ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುತ್ತಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಸುಮಾರು 900 ವಸತಿ ಶಾಲೆಗಳಲ್ಲಿ ಶೇ.25 ಪ್ರತಿಶತ ಅಂಗವಿಕಲತೆ ಹೊಂದಿದ ಮಕ್ಕಳಿಗೆ ಶೇ.10 ರಷ್ಟು ಸೀಟ್ ಮೀಸಲಾತಿ ಇರಿಸಿ ಉಚಿತ ಶಿಕ್ಷಣ ನೀಡಲು ಅವಕಾಶವಿದೆ ಎಂದರು.
ಬ್ರೈಲ್ ಲಿಪಿ ಕಲಿತ ಅಂಧರು ಸುಮಾರು 12 ಜನ ಐಎಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಪಡೆಯುವ ಮೀಸಲಾತಿ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಅಂಗವಿಕಲರಿಗಾಗಿಯೇ ಇರುವ ಶೇ.4 ರಿಂದ 5 ರಷ್ಟು ಮೀಸಲಾತಿ ಇದೆ ಎಂದರು.
ಪ್ರವಾಸಿ ತಾಣ, ಶಾಲಾ-ಕಾಲೇಜು, ಉದ್ಯಾನವನ, ಪೊಲೀಸ್ ಠಾಣೆ, ಸಾರ್ವಜನಿಕ ಸ್ಥಳ ಸೇರಿದಂತೆ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ವಿಕಲಚೇತನರ ಸ್ನೇಹಿ ವಾತಾವರಣ ಇರಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ಆದೇಶವಿದೆ. ಆಯಾ ಸ್ಥಳಗಳಲ್ಲಿ ಅಂಗವಿಕಲರ ಓಡಾಟಕ್ಕೆ ಸುಲಭ ದಾರಿ, ವ್ಹೀಲ್ಚೇರ್ ವ್ಯವಸ್ಥೆ, ಶೌಚಾಲಯ ಸೇರಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಕಳೆದ ಪ್ಯಾರಾಲಂಪಿಕ್ ನಲ್ಲಿ ದೇಶಕ್ಕೆ ಸಾಕಷ್ಟು ಪದಕ ಲಭಿಸಿವೆ. ಕ್ರೀಡಾ ವಲಯದಲ್ಲಿ ಪ್ರೋತ್ಸಾಹಿಸಲು ಕ್ರೀಡೆಗಳಲ್ಲಿ ಆಸಕ್ತಿ ಹೊಂದಿದವರಿಗಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡೆ ಆಯೋಜಿಸಬೇಕು ಎಂದು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಶೇಷಚೇತನರ ಮುನ್ನಲೆಗೆ ನಗರಸಭೆ, ಸ್ಥಳೀಯ- ಸಂಸ್ಥೆಗಳ ಶೇ.05 ರ ಅನುದಾನದಲ್ಲಿ ಜಿಲ್ಲಾ ಕೇಂದ್ರದಲ್ಲಿ ಟೈಲರಿಂಗ್ ಹಾಗೂ ವಿವಿಧ ರೀತಿಯ ಉದ್ಯೋಗ ತರಬೇತಿ ನೀಡಬೇಕು. ಇದರಿಂದ ಸ್ವಾವಲಂಬಿ ಉದ್ಯೋಗ ನಡೆಸಲು ಸಹಕಾರಿಯಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಅಂಗವಿಕಲರ ಅಭಿವೃದ್ಧಿ ಹಣಕಾಸು ಸಂಸ್ಥೆಯ ಮೂಲಕ ಪ್ರತಿ ವರ್ಷ ರಾಜ್ಯಕ್ಕೆ ರೂ.100 ಕೋಟಿ ಅನುದಾನ ತರಬಹುದಾಗಿದ್ದು, ಅಂಗವಿಕಲರಿಗೆ 50 ಲಕ್ಷದವರೆಗೆ ಸಾಲ ಸೌಲಭ್ಯ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ ಎಂದರು.
ವಿಕಲಚೇತನ ವ್ಯಕ್ತಿಗಳಿಗೆ ಅಗತ್ಯವಿರುವ ಆರೋಗ್ಯ, ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ ಹಾಗೂ ಸಾಮಾಜಿಕ ಭದ್ರತೆಗಳಂತಹ ಪುನರ್ವಸತಿ ಸೇವೆಗಳನ್ನು ಕಲ್ಪಿಸಲು, ವಿಕಲಚೇತನ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವುದರ ಮೂಲಕ ಅವರ ಹಕ್ಕುಗಳನ್ನು ಸಂರಕ್ಷಿಸಲು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016ರ ಅನುಷ್ಠಾನಕ್ಕಾಗಿ ರಾಜ್ಯ ಆಯುಕ್ತರ ಕಚೇರಿ ಸ್ಥಾಪಿಸಿದ್ದು, ಆಯುಕ್ತರನ್ನು ನೇಮಕ ಮಾಡಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016 ಅನುಷ್ಠಾನಗೊಳಿಸುವಲ್ಲಿ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ನೀಡಬೇಕಿದೆ ಎಂದರು.
ಆರ್ಬಿಎಸ್ಕೆ ಆರೋಗ್ಯ ಕಾರ್ಯಕ್ರಮದಡಿ ಮೂರು ವೈದ್ಯರನ್ನೊಳಗೊಂಡ ತಂಡವು ಪ್ರತಿ ಶಾಲೆಗೆ ಭೇಟಿ 0-18 ವರ್ಷದೊಳಗಿನ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಕೈಗೊಂಡು ಅವರಲ್ಲಿನ ಅಂಗವಿಕಲತೆಯನ್ನು ಗುರುತಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ಸುಮಾರು 35 ಬುದ್ಧಿಮಾಂದ್ಯ ಮಕ್ಕಳ ಶಾಲೆಗಳ ಅಭಿವೃದ್ಧಿಗಾಗಿ ಈ ಭಾಗದ ಕೆಕೆಆರ್ಡಿಬಿ ವತಿಯಿಂದ ವಿಶೇಷ ಅನುದಾನಕ್ಕಾಗಿ ಪ್ರಸ್ತಾಪಿಸಿ ಮನವಿ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ವಿಶೇಷಚೇತನರಿಗೆ ಮಾಸಾಶನ ಸೌಲಭ್ಯ ಪಡೆಯಲು ಮತ್ತು ಪಿಂಚಣಿ ಪಡೆಯಲು ವಿಳಂಬವಾದಲ್ಲಿ ಆಯಾ ಗ್ರಾಪಂ ಮಟ್ಟದ ನಾಡಕಚೇರಿಗೆ ಸಂಪರ್ಕಿಬೇಕು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ಕೂಡಲೇ ಪರಿಹಾರಕ್ಕಾಗಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.




