ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದೆ. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್ಎಂಎಸ್ ಅವಲಂಬಿಸದೇ ನೇರವಾಗಿ ನೋಂದಣಿ ಕೇಂದ್ರಗಳಿಗೆ ದಾಖಲಾತಿಗಳೊಂದಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಯೋಜನೆಗೆ ಚಾಲನೆ ಸಿಕ್ಕ 7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ ಅವರು, ಗೃಹ ಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.



