ಜನಾರ್ದನ ರೆಡ್ಡಿ ಅವರ ಕೊಲೆಗೆ ಸಂಚು ರೂಪಿಸಿದ್ದರು: ಬಿ.ಶ್ರೀರಾಮಲು

4 months ago

ಬಳ್ಳಾರಿ: ಗಲಭೆ ವೇಳೆ ಶಾಸಕ ಜನಾರ್ದನ ರೆಡ್ಡಿ ಅವರನ್ನು ಗುರಿಯಾಗಿಟ್ಟುಕೊಂಡು ಕೆಲವರು ಪೆಟ್ರೋಲ್‌ಬಾಂಬ್‌ ಹಾಕಿ ಕೊಲೆ ಮಾಡುವ ಸಂಚು ರೂಪಿಸಿದ್ದರು ಎಂದು ಆರೋಪಿಸಿರುವ ಮಾಜಿ ಸಚಿವ ಬಿ.ಶ್ರೀರಾಮಲು, ಸರ್ಕಾರ ಈ ಪ್ರಕರಣವನ್ನು ಹೈಕೋರ್ಟ್‌ ನ್ಯಾಯಮೂರ್ತಿ ಇಲ್ಲವೇ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಳ್ಳಾರಿಯಲ್ಲಿ ನಡೆದ ಗಲಭೆ ಸಾಮಾನ್ಯ ಗಲಾಟೆಯಲ್ಲ. ಇದೊಂದು ಪೂರ್ವನಿಯೋಜಿತ ಕೃತ್ಯ. ಜನಾರ್ದನ ರೆಡ್ಡಿ ಅವರನ್ನು ಗನ್‌ಪಾಯಿಂಟ್‌ ಮೇಲಿಟ್ಟು ಪೆಟ್ರೋಲ್‌ ಬಾಂಬ್‌ ಮೂಲಕ ಕೊಲೆ ಮಾಡುವ ಸಂಚು ರೂಪಿಸಲಾಗಿತ್ತೆಂದು ಗಂಭೀರ ಆರೋಪಿಸಿದರು.

ಘಟನೆಗೆ ಶಾಸಕ ನಾರಾ ಭರತ್‌ ರೆಡ್ಡಿ ಅವರ ಆಪ್ತ ಸತೀಶ್‌ ರೆಡ್ಡಿ ಹಾಗೂ ಅವರ ಬೆಂಬಲಿಗರೇ ನೇರ ಕಾರಣ. ರಾಜ್ಯ ಸರ್ಕಾರದಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹೀಗಾಗಿ ಹೈಕೋರ್ಟ್‌ ನ್ಯಾಯಮೂರ್ತಿ ಇಲ್ಲವೇ ಸಿಬಿಐನಿಂದ ತನಿಖೆ ನಡೆಸಬೇಕು. ಆಗಮಾತ್ರ ಸತ್ಯಾಂಶ ಹೊರಬಲಿದೆ ಎಂದರು.

ಘಟನೆ ನಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್‌ ಎಂಬ ಯುವಕನ ಸಾವಾಗಿದೆ. ಮಗನ ಬಗ್ಗೆ ತಾಯಿ ಭವಿಷ್ಯ ಕಟ್ಟಿಕೊಂಡಿದ್ದಳು. ಆ ಯುವಕ ಯಾವುದೇ ಪಾರ್ಟಿಗೆ ಸೇರಿರಲಿ. ಫೈರಿಂಗ್‌ನಲ್ಲಿ ಆತನ ಸಾವಾಗಿದೆ. ರಾಜಶೇಖರ್‌ ರೆಡ್ಡಿಗೆ ಸಂತಾಪ ಸೂಚಿಸುತ್ತೇನೆ. ಆ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ಕೊಡಲೆಂದು ದೇವರಲ್ಲಿ ಪ್ರಾರ್ಥನೆ ಮಾಡ್ತೇನೆ. ಈಗಾಗಲೇ ಆಗಿರುವ ಪ್ರತಿಯೊಂದೂ ಮಾಹಿತಿಯನ್ನೂ ಹೇಳಿದ್ದೇನೆ. ನಾನು ರಾಜಕಾರಣದಲ್ಲಿ ಸಾಕಷ್ಟು ನೋಡಿದ್ದೇನೆ ಎಂದು ಬೇಸರ ಹೊರಹಾಕಿದರು.

Leave a Reply