ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ತಮ್ಮ ತಂದೆಯವರ ಅನಾರೋಗ್ಯ ಮತ್ತು ಅನಂತರದ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.
ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಅವರು ಹೇಳಿದ್ದಾರೆ.




