ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ: ಸಚಿವ ಸುಧಾಕರ್‌

5 years ago

ಪ್ರಮುಖಾಂಶಗಳು

  • ಪ್ರವಾಹಪೀಡಿತಜಿಲ್ಲಾಡಳಿತಗಳಿಗೆಕಟ್ಟೆಚ್ಚರಕ್ಕೆತಾಕೀತು
  • ಕಾಳಜಿಕೇಂದ್ರಗಳಲ್ಲಿಕಟ್ಟುನಿಟ್ಟಿನಆರೋಗ್ಯಸೇವೆಗೆಸೂಚನೆ
  • ಹಿರಿಯನಾಗರಿಕರು, ಗರ್ಭಿಣಿ – ಬಾಣಂತಿಯರಮತ್ತುಮಕ್ಕಳಬಗ್ಗೆಕಾಳಜಿಗೆತಾಕೀತು
  • ಕೋವಿಡ್‌ ಮತ್ತುಸಾಂಕ್ರಾಮಿಕರೋಗಹರಡದಂತೆಮುನ್ನೇಚ್ಚರಿಕೆಕ್ರಮಕ್ಕೆಸೂಚನೆ
  • ಕಾಳಜಿಕೇಂದ್ರಗಳಲ್ಲಿಕೋವಿಡ್‌ ಮಾರ್ಗಸೂಚಿಗಳಪಾಲಿಸುವಂತೆಆದೇಶ

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಸೂಚನೆ ನೀಡಿದ್ದಾರೆ.

ಪ್ರವಾಹಪೀಡಿತ ಗ್ರಾಮಗಳು, ಸ್ಥಳಾಂತರಗೊಂಡಿರುವ ಗ್ರಾಮಗಳು, ಸಂತ್ರಸ್ತರಿಗೆ ತೆರೆಯುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಶುಕ್ರವಾರ ಅಗತ್ಯ ಸೂಚನೆಗಳನ್ನು ನೀಡಿದರು.

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಶುದ್ಧ ಕುಡಿಯುವ ನೀರು ಮತ್ತು ಗುಣಮಟ್ಟದ ಆಹಾರ ಪೂರೈಸಬೇಕು. ಒಂದು ವೇಳೆ ಶುದ್ಧ ಕುಡಿಯುವ ನೀರಿನ ಘಟಕಗಳು ಸಮೀಪದಲ್ಲಿ ಇಲ್ಲದಿದ್ದರೆ ಲಭ್ಯವಿರುವ ನೀರನ್ನೇ ಕಾಯಿಸಿ, ಶೋಧಿಸಿ ನೀಡಲು ಸೂಚಿಸಲಾಗಿದೆ. ಕೇಂದ್ರಗಳ ಒಳಗೆ ಮತ್ತು ಹೊರಭಾಗದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು, ಪ್ರತಿದಿನ ರೋಗ ನಿರೋದಕ ದ್ರಾವಣ ಸಿಂಪಡಿಸಬೇಕು, ಕೇಂದ್ರದಲ್ಲಿರುವ ಎಲ್ಲರ ಆರೋಗ್ಯ ತಪಾಸಣೆ ಮಾಡಬೇಕು ಮತ್ತು ಅವರಿಗೆ ಕೋವಿಡ್‌ ಮತ್ತುಸಾಂಕ್ರಾಮಿಕ ರೋಗಗಳ ಬಗ್ಗೆ ತಜ್ಞರು ಅರಿವು ಮೂಡಿಸುವ ಕೆಲಸ ಮಾಡಲು ಆದೇಶಿಸಿದರು.

ಹಿರಿಯ ನಾಗರಿಕರು, ಬಾಣಂತಿಯರು, ಗರ್ಭಿಣಿಯರು ಮತ್ತು ಮಕ್ಕಳನ್ನು ಸಾಧ್ಯವಾದಷ್ಟು ಮಟ್ಟಿಗೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಘಟಕ ಅಥವಾ ತಾಲ್ಲೂಕು ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ವಿಶೇಷ ಕಾಳಜಿಯಿಂದ ಅವರನ್ನು ನೋಡಿಕೊಳ್ಳಬೇಕು. ಜ್ವರ ಹಾಗೂ ಇತರೆ ರೋಗಲಕ್ಷಣ ಇದ್ದವರಿಗೆ ತಕ್ಷಣ ಕೋವಿಡ್‌ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲಿರುವ ಎಲ್ಲರಿಗೂ ಮಾಸ್ಕ್‌ ವಿತರಿಸಬೇಕು, ಸ್ಯಾನಿಟೈಸರ್‌ ನೀಡುವ ಜತೆಗೆ ಶುಚಿತ್ವಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಜತೆಗೆ ಕಡ್ಡಾಯವಾಗಿ ಭೌತಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಎಚ್ಚರಿಕೆ ನೀಡಿದರು.

ಕಳೆದ ವರ್ಷಗಳಿಗೆ ಹೋಲಿಸಿದರೆ ಡೆಂಗ್ಯೂ, ಚಿಕೂನ್‌ ಗುನ್ಯಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಹರಡುವಿಕೆ ಕಡಿಮೆ ಪ್ರಮಾಣದಲ್ಲಿದೆ. ಮುಂದಿನ ಎರಡು ತಿಂಗಳಲ್ಲಿ ಅನೇಕ ಹಬ್ಬಹರಿದಿನಗಳ ಆಚರಣೆ ಹೆಚ್ಚು. ಈ ಹಿನ್ನೆಲೆಯಲ್ಲಿ ವಿಶೇಷ ಗಮನ ಹರಿಸಿ ಪರಿಸ್ಥಿತಿ ನಿಭಾಯಿಸುವಂತೆ ಜಿಲ್ಲಾಡಳಿತಗಳ ಜತೆ ಸಮನ್ವಯ ಇಟ್ಟುಕೊಂಡು ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಕಾಳಜಿ ಕೇಂದ್ರಗಳ ಸಮೀಪದಲ್ಲಿ ಪಿಎಚ್‌ಸಿ ಅಥವಾ ಇತರೆ ಆರೋಗ್ಯ ಸೌಲಭ್ಯಗಳು ಇಲ್ಲದಿದ್ದರೆ ಸಂಚಾರಿ ಆರೋಗ್ಯ ಘಟಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕು. ಚಳಿಗಾಲದ ಜತೆ ಹಬ್ಬಗಳ ಹಿನ್ನೆಲೆ ಇರುವುದರಿಂದ ಕೋವಿಡ್‌ ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಇಲಾಖೆಯಿಂದ ಯಾವುದೇ ಲೋಪ ಆಗದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮುನ್ನೇಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಕ್ಷಣವೇ ಸೂಚನೆ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರವಾಹ ಪರಿಸ್ಥಿತಿ ಗಂಭೀರವಾಗಿರುವ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರನ್ನು ಇತರೆ ಇಲಾಖೆಗಳ ಜತೆ ಸಮನ್ವಯ ಕಾಯ್ದುಕೊಳ್ಳಲು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡುವಂತೆಯೂ ಸಚಿವರು ಆದೇಶ ನೀಡಿದರು. ಸಭೆಯಲ್ಲಿಇಲಾಖೆಯ ನಾನಾ ಕಾರ್ಯಕ್ರಮಗಳು ಮತ್ತು ಯೋಜನೆಗಳ ಪ್ರಗತಿ ಪರಿಶೀಲನೆಯನ್ನೂ ಸುಧಾಕರ್‌ ಪರಾಮರ್ಶಿಸಿದರು.

ಆರೋಗ್ಯ ಇಲಾಖೆ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌, ಎನ್‌.ಎಚ್‌.ಎಂ. ವ್ಯವಸ್ಥಾಪಕ ನಿರ್ದೇಶಕಿ ಅರುಂಧತಿ ಚಂದ್ರಶೇಖರ್‌, ಆರೋಗ್ಯ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ್‌ ಪಾಟೀಲ್‌ ಹಾಗೂ ನಾನಾ ವಿಭಾಗಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮುಂದೆ ಚಳಿಗಾಲ ಮತ್ತು ಹಬ್ಬದ ದಿನಗಳು ಇರುವುದರಿಂದ ಕೋವಿಡ್‌ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಟ್ಟಾರೆ ಸಂಕಷ್ಟದಲ್ಲಿರುವ ಪ್ರದೇಶಗಳ ಜನರ ಆರೋಗ್ಯ ಸಂರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದ್ದು ಅದನ್ನು ಸಮರ್ಥವಾಗಿ ನಿಭಾಯಿಸಲಾಗುವುದು. – ಡಾ. ಕೆ. ಸುಧಾಕರ್‌, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

Leave a Reply