ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ 

2 years ago

ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಾಳೆ ಹೈಕೋರ್ಟ್ ನಲ್ಲಿ ನಡೆಯಲಿದೆ.

ಕಳೆದ ವಾರ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕೈಗೆತ್ತಿಕೊಂಡಿದ್ದು, ರಾಜ್ಯಪಾಲರ ಕಾರ್ಯದರ್ಶಿ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿಗೊಳಿಸಿ ಆಗಸ್ಟ್ 29 ಕ್ಕೆ ವಿಚಾರಣೆ ಮುಂದೊಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಹೊರಬೀಳುವ ತೀರ್ಪು ಕುತೂಹಲಕ್ಕೆ ಎಡೆಮಾಡಿದೆ.

ಕೋರ್ಟಿನಲ್ಲಿ ಸಿದ್ದರಾಮಯ್ಯ ವಿರುದ್ಧವಾಗಿ ತೀರ್ಪು ಬಂದಲ್ಲಿ ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕೂಡ ಸಿದ್ಧತೆಗಳು ನಡೆದಿವೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಈ ವಿಷಯದಲ್ಲಿ ಹಲವು ಸುತ್ತಿನ ಸಭೆ ನಡೆಸಿ ಅಗತ್ಯವಿರುವ ದಾಖಲೆ ಪತ್ರಗಳನ್ನು ಸಿದ್ಧಪಡಿಸಿಟ್ಟುಕೊಂಡಿದ್ದಾರೆ.

ಈ ನಡುವೆ ಈ ವಿಷಯದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದೆ. ಕೋರ್ಟ್ ನ ತೀರ್ಪು ಯಾವುದೇ ಆಗಿರಲಿ, ಹೈಕಮಾಂಡ್ ಮತ್ತು ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನಿರ್ಣಯವನ್ನು ಕೋರ್ಟ್ ಪರಿಗಣಿಸುವುದಿಲ್ಲ ಎಂಬ ನಿರೀಕ್ಷೆ ಇದೆ. ಸಿಎಂ ಅವರ ಸಹಿ, ಯಾವುದೇ ರೀತಿಯ ದಾಖಲೆಗಳಿಲ್ಲ. ರಿಜಿಸ್ಟ್ರೇಷನ್ ಅಲ್ಲಿಯೂ ಸಹ ಅವರ ಹೆಸರು ಉಲ್ಲೇಖವಾಗಿಲ್ಲ. ಇದೆಲ್ಲವನ್ನು ನ್ಯಾಯಾಲಯ ಗಮನಿಸಿಯೇ ತೀರ್ಮಾನ ಕೊಡುತ್ತದೆ ಎಂದು ನಿರೀಕ್ಷೆ ಮಾಡಿದ್ದೇವೆ ಎಂದರು.

ರಾಜ್ಯ ಕಾಂಗ್ರೆಸ್ ಶಾಸಕಾಂಗ ಸಭೆ ಮತ್ತು ಮಂತ್ರಿಮಂಡಲ ಮುಖ್ಯಮಂತ್ರಿ ಅವರ ಬೆನ್ನಿಗೆ ನಿಂತಿದೆ ಇವರ ವಿರುದ್ಧ ಮಾಡಿರುವ ರಾಜಕೀಯ ಪಿತೂರಿ ಎಲ್ಲರಿಗೂ ಗೊತ್ತಿದೆ. ನಾಳಿನ ತೀರ್ಪು ಹೊರಬಿದ್ದ ನಂತರ ಈ ಪಿತೂರಿಯ ಬಗ್ಗೆ ರಾಜ್ಯದ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದಷ್ಟು ವೇಗವಾಗಿ ಇತರೆ ಪ್ರಕರಣಗಳ ಬಗ್ಗೆ ರಾಜ್ಯಪಾಲರು ಯಾಕೆ ತೀರ್ಮಾನ ಕೈಗೊಂಡಿಲ್ಲ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ ಮುರುಗೇಶ್ ನಿರಾಣಿ ಮತ್ತು ಜನಾರ್ದನ ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ವರ್ಷಗಳಿಂದ ಬಾಕಿ ಇದೆ. ಇವುಗಳಿಗೆ ಶೀಘ್ರವೇ ಅನುಮತಿ ನೀಡಬೇಕು ಎಂದು ರಾಜ್ಯ ಸಚಿವ ಸಂಪುಟ ಕೂಡ ಸಲಹೆ ಮಾಡಿದೆ ಎಂದರು.

ರಾಜ್ಯ ಸಚಿವ ಸಂಪುಟ ಮಾಡಿರುವ ಸಲಹೆಯನ್ನು ಕೂಡ ರಾಜ್ಯಪಾಲರು ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ಮಂತ್ರಿಗಳು ಮತ್ತು ಎಲ್ಲಾ ಶಾಸಕರು ರಾಜಭವನಕ್ಕೆ ತೆರಳಿ ಅವರ ಮನವರಿಕೆ ಮಾಡುವ ಪ್ರಯತ್ನ ಮಾಡಲಿದ್ದೇವೆ ಎಂದರು.

Leave a Reply