ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ

11 months ago

ಬೆಂಗಳೂರು: ರಾಜ್ಯದಲ್ಲಿ ಕಳೆದ ಎಂಟು ಹತ್ತು ದಿನಗಳಿಂದ ಚದುರಿದಂತೆ ಬೀಳುತ್ತಿದ್ದ ಮಳೆಯು ಕಳೆದೆರಡು ದಿನಗಳಿಂದ ಬಿರುಸುಗೊಂಡಿದ್ದು, ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಅದರಲ್ಲೂ ಬುಧವಾರ ಮತ್ತು ಗುರುವಾರ ಕರಾವಳಿ ಹಾಗೂ ಮಲೆನಾಡು ಭಾಗದ ಎಂಟು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’ ಘೋಷಿಸಲಾಗಿದೆ.

ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೋಲಾರ, ಯಾದಗಿರಿ, ಮೈಸೂರು, ಮಂಡ್ಯ, ಬೆಳಗಾವಿ, ಧಾರವಾಡ, ವಿಜಯಪುರ, ಕೊಡಗು, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ 15 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.

ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಹಾವೇರಿ. ವಿಜಯನಗರ, ದಾವಣಗೆರೆ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಕೆರೆಕಟ್ಟೆಗಳು ಭರ್ತಿಯಾಗತೊಡಗಿವೆ. ಹೊಲಗದ್ದೆಗಳು ಜಲಾವೃತವಾಗಿವೆ. ಹಲವೆಡೆ ಮನೆಗಳು ಕುಸಿದು ಬಿದ್ದಿವೆ. ಮಾವು, ಹಲಸು, ಹೂ-ಹಣ್ಣು, ತರಕಾರಿ ಬೆಳೆಗಳು ನಾಶವಾಗಿವೆ.

ಕಲಬುರಗಿಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಹಾನಿ ಸಂಭವಿಸಿದೆ. ಲಕ್ಷಾಂತರ ಎಕರೆಯಲ್ಲಿದ್ದ ಬಾಳೆ ತೋಟ ನಾಶವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತು ಎಂದು ರೈತರು ಅಲವತ್ತುಗೊಂಡಿದ್ದಾರೆ.

ದ.ಕನ್ನಡ, ಉಡುಪಿ, ಕರಾವಳಿ ಭಾಗದ ವಿವಿಧೆಡೆ ಮಳೆ ಸುರಿಯುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ಕೂಡ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

Leave a Reply