ಬೆಂಗಳೂರು: ಮೈಸೂರಿನ ವಿವೇಕ್ ಹೋಟೆಲ್ ವ್ಯವಸ್ಥಾಪಕ ನಿರ್ದೇಶಕ ಎಲ್.ವಿವೇಕಾನಂದ ಅವರನ್ನು ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ನ (ಬಿಟಿಸಿಎಲ್) ಸ್ಟೀವರ್ಡ್ ಆಗಿ ನೇಮಕ ಮಾಡಿದ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ.
ಮೈಸೂರಿನ ಪ್ರತಿಷ್ಠಿತ ಕಿಂಗ್ಸ್ ಕೋರ್ಟ್ ಹೋಟೆಲ್ ಮಾಲೀಕರಾಗಿರುವ ಕಿಂಗ್ಸ್ ಕೋರ್ಟ್ ವಿವೇಕ್ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟ್ಯಂತರ ರೂಪಾಯಿ ಲಂಚ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ನ (ಬಿಟಿಸಿಎಲ್) ಸ್ಟೀವರ್ಡ್ ಆಗಿ ನೇಮಕ ಮಾಡಿದ್ದಾರೆ ಎಂಬ ಆರೋಪವಿದೆ.
ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಈ ಕುರಿತು ಕೆಲವು ದಾಖಲೆಗಳೊಂದಿಗೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಸಿದ್ದರಾಮಯ್ಯ ಅವರು ವಿವೇಕಾನಂದ ಅವರಿಂದ ನಿವೇಶನ ಖರೀದಿಸಲು ಮತ್ತು ಗೃಹ ನಿರ್ಮಾಣಕ್ಕಾಗಿ 1.30 ಕೋಟಿ ಪಡೆದಿದ್ದಾರೆ. ಇದಾದ ಬಳಿಕ ಅವರನ್ನು ಸ್ಟೀವರ್ಡ್ ಆಗಿ ನೇಮಕ ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಮನವಿ ಮಾಡಿದ್ದರು.
ಈ ದೂರು ಕುರಿತು ತನಿಖೆ ಮಾಡಿದ ಲೋಕಾಯುಕ್ತ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ವಿಚಾರಣೆ ಸಮಯದಲ್ಲಿ ಬಿ ರಿಪೋರ್ಟ್ ಗೆ ಎನ್.ಆರ್.ರಮೇಶ್ ಆಕ್ಷೇಪಿಸಿ, ಪ್ರತಿಭಟನಾ ಅರ್ಜಿಯನ್ನು ಸಲ್ಲಿಸಿದರು. ಇದನ್ನು ‘ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಪುರಸ್ಕರಿಸಿದ್ದಾರೆ.
ಅಲ್ಲದೆ ತನಿಖಾಧಿಕಾರಿ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ತಿರಸ್ಕರಿಸಲಾಗುತ್ತಿದೆ. ತನಿಖಾಧಿಕಾರಿ ಹೊಸದಾಗಿ ಹೆಚ್ಚಿನ ತನಿಖೆ ನಡೆಸಿ ಆರು ತಿಂಗಳ ಒಳಗಾಗಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಇಲ್ಲಿ ಭ್ರಷ್ಟಾಚಾರ ನಡೆದಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸದೇ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ಕಾನೂನಿನ ದೃಷ್ಟಿಯಲ್ಲಿ ಇದು ಸರಿಯಲ್ಲ. ಪ್ರಾಥಮಿಕ ತನಿಖೆಯನ್ನಷ್ಟೇ ಆಧರಿಸಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ
ಜನ ಪ್ರತಿನಿಧಿ ವಿರುದ್ಧಹಣ ಅಕ್ರಮವಾಗಿ ಸ್ವೀಕರಿಸಿದ ಆರೋಪವಿದ್ದು, ಪ್ರತಿಫಲಾಪೇಕ್ಷೆಯ ಆರೋಪವನ್ನೂ ಮಾಡಿರುವಾಗ ಇದರಲ್ಲಿ ದುರುದ್ದೇಶ ಇದೆಯೇ? ಜನಪ್ರತಿನಿಧಿಗಳಿಗೆ ಇರುವ ನೀತಿ ಸಂಹಿತೆ ಉಲ್ಲಂಘಿಸಲಾಗಿದೆಯೇ ಎಂಬುದನ್ನೆಲ್ಲಾ ತನಿಖಾ ಸಂಸ್ಥೆ ಪರಿಶೀಲಿಸಬೇಕು. ಇದನ್ನು ಪರಿಗಣಿಸದೇ ಸಲ್ಲಿಸುವ ವರದಿಯನ್ನು ಪೂರ್ಣ ವರದಿ ಎನ್ನಲಾಗದು ಎಂದು ಆದೇಶದಲ್ಲಿ ಹೇಳಲಾಗಿದೆ.




