ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

3 years ago

#HighCourt #orders #reexamination #PSI

ಸ್ವತಂತ್ರ ಸಂಸ್ಥೆಯೊಂದರ ಮೂಲಕ ನೇಮಕಾತಿ ಪರೀಕ್ಷೆ ನಡೆಸಲು ನಿರ್ದೇಶನ

ಬೆಂಗಳೂರು: ನೇಮಕಾತಿ ವೇಳೆ ಅಕ್ರಮ ನಡೆದು ಪ್ರಕ್ರಿಯೆ ರದ್ದುಗೊಂಡಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) 545 ಹುದ್ದೆಗಳಿಗೆ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೆ ಸ್ವತಂತ್ರ ಸಂಸ್ಥೆಯೊಂದರ ಮೂಲಕ ನೇಮಕಾತಿ ಪರೀಕ್ಷೆ ನಡೆಸಲು ಆದೇಶಿಸಿದೆ.

ಈ ಹಿಂದೆ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪ್ರಕ್ರಿಯೆ ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ 545 ಪಿಎಸ್ಐಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್ ಅವಕಾಶ ಮಾಡಿಕೊಟ್ಟಂತಾಗಿದೆ.

ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಮೂಲಕ ನೇಮಕಾತಿಗೆ ಮರುಪರೀಕ್ಷೆ ನಡೆಸುವುದು ಬೇಡ, ಅಕ್ರಮವೆಸಗಿದ ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದ ಅಭ್ಯರ್ಥಿಗಳ ಪರ ದಾವೆಯನ್ನು ತಿರಸ್ಕರಿಸಿದೆ.

ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಬಿಜೆಪಿ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಬೇಕು.

ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಒಂದು ಹಂತದಲ್ಲಿ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ಎಲ್ಲ ಅರ್ಜಿಗಳ ವಿಚಾರಣೆಯನ್ನು ನಡೆಸಿತ್ತು. ಕೆಲವು ದಿನಗಳ ಹಿಂದೆ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನು ನವೆಂಬರ್ 10ಕ್ಕೆ ನಿಗದಿ ಮಾಡಿತ್ತು.ಅದರಂತೆ ಈಗ ತೀರ್ಪು ಹೊರಬಿದ್ದಿದೆ.

ಪಿಎಸ್ಐ ನೇಮಕಾತಿ ಹಗರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಪೀಠ ಆಗಸ್ಟ್ 4ರ ವಿಚಾರಣೆಯಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರ ಪೀಠಕ್ಕೆ ಸಲ್ಲಿಸಿತ್ತು.

ಏನಿದು ಪರೀಕ್ಷಾ ಅಕ್ರಮ?: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2021ರ ಅಕ್ಟೋಬರ್ 3ರಂದು ಪಿಎಸ್ಐ ನೇಮಕಾತಿ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 545 ಹುದ್ದೆಗಳಿಗಾಗಿ ಲಕ್ಷಾಂತರ ಜನ ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿತ್ತು.

ತನಿಖೆಯಲ್ಲಿ 52 ಅಭ್ಯರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲವರ ಬಂಧನವಾಗಿತ್ತು. ಮತ್ತು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 52 ಅಭ್ಯರ್ಥಿಗಳನ್ನು ಇನ್ನು ಯಾವುದೇ ಪೊಲೀಸ್ ಪರೀಕ್ಷೆಗೆ ಹಾಜರಾಗದಂತೆ ಶಾಶ್ವತವಾಗಿ ನಿರ್ಬಂಧಿಸಲಾಯಿತು. ಅಷ್ಟೇ ಅಲ್ಲ ಇಡೀ ನೇಮಕಾತಿ ಪರೀಕ್ಷೆ ರದ್ದುಪಡಿಸಲಾಯಿತು.

ಈ ನಡುವೆ ಅಕ್ರಮ ಎಸಗಿದವರನ್ನು ಹೊರತುಪಡಿಸಿ ಉಳಿದವರ ಆಯ್ಕೆ ಪಟ್ಟಿಯನ್ನು ಪ್ರಕಟಿಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದರು. ಆದರೆ, ಸರ್ಕಾರ ಮರುಪರೀಕ್ಷೆಗೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೊಕ್ಕಿದ್ದರು.

ಪ್ರಕರಣದ ಟೈಮ್ ಲೈನ್:
2021, ಜನವರಿ 21: ಕರ್ನಾಟಕ ಪೊಲೀಸ್ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿಗೆ ನೋಟಿಫಿಕೇಷನ್
2021, ಅಕ್ಟೋಬರ್ 3: ಲಿಖಿತ ಪರೀಕ್ಷೆ
2022, ಜನವರಿ 1: ಪರೀಕ್ಷಾ ಕೇಂದ್ರಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಅಭ್ಯರ್ಥಿಗಳಿಂದ ದೂರು
2022, ಜನವರಿ 18: 545 ಪಿಎಸ್ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
2022, ಫೆಬ್ರವರಿ 7: ತಾತ್ಕಾಲಿಕ ಆಯ್ಕೆ ಪಟ್ಟಿ ತಡೆಗೆ ನೇಮಕಾತಿ ವಿಭಾಗದ ಎಡಿಐಜಿ ಸೂಚನೆ
2022, ಏಪ್ರಿಲ್ 7: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ಸಿಐಡಿಗೆ
2022, ಏಪ್ರಿಲ್ 8: ಕಲಬುರ್ಗಿ ನಗರ ಪೊಲೀಸ್ ಠಾಣೆಗೆ ಬೆಂಗಳೂರು ಸಿಐಡಿ, ಇನ್ಸ್ಪೆಕ್ಟರ್ ಕೆ.ಎಚ್ ದಿಲೀಪ್ ಕುಮಾರ್ ದೂರು
2022, ಏಪ್ರಿಲ್ 9: ಆರೋಪಿಗಳ ವಿರುದ್ಧ ಕಲಬುರ್ಗಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
2022, ಏಪ್ರಿಲ್ 9: ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ವೀರೇಶ್ ಮೊದಲ ಬಂಧನ
2022, ಏಪ್ರಿಲ್ 21: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ ಐವರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧನ
2022, ಏಪ್ರಿಲ್ 22: ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧನ
2022, ಏಪ್ರಿಲ್ 27: ಪೊಲೀಸ್ ನೇಮಕಾತಿ ವಿಭಾಗದ ಎಜಿಡಿಪಿ ಅಮೃತ್ ಪೌಲ್ ವರ್ಗಾವಣೆ
2022, ಏಪ್ರಿಲ್ 29: ಪಿಎಸ್ಐ ನೇಮಕಾತಿ ಮರು ಪರೀಕ್ಷೆಗೆ ನಿರ್ಧರಿಸಿದ ಸರ್ಕಾರ
2022, ಏಪ್ರಿಲ್ 30: ಮರು ಪರೀಕ್ಷೆ ನಿರ್ಧಾರ ಹಿಂಪಡೆಯಲು ಆಗ್ರಹಿಸಿ ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಪ್ರತಿಭಟನೆ
2022, ಮೇ 1: 400ಕ್ಕೂ ಹೆಚ್ಚು ಅಭ್ಯರ್ಥಿಗಳ ವಿಚಾರಣೆ ನಡೆಸಿದ ಸಿಐಡಿ
2022, ಮೇ 10: ನೇಮಕಾತಿ ವಿಭಾಗದಲ್ಲಿ ನಾಲ್ವರು ಅಧಿಕಾರಿಗಳು ಸೇರಿ 6 ಮಂದಿ ಬಂಧನ
2022, ಮೇ 12: ನೇಮಕಾತಿ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದ ಶಾಂತಕುಮಾರ್ ಬಂಧನ
2022, ಮೇ 26, 27: ಸಿಐಡಿ ಅಧಿಕಾರಿಗಳಿಂದ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವಿಚಾರಣೆ
2022, ಜೂನ್ 1: ಸಿಐಡಿ ಅಧಿಕಾರಿಗಳಿಂದ ಆರ್ಡಿ ಪಾಟೀಲ್ ಅಳಿಯ ಪ್ರಕಾಶ್ ಸೇರಿ ಮೂವರ ಬಂಧನ
2022, ಜುಲೈ 4: ಸಿಐಡಿ ಅಧಿಕಾರಿಗಳಿಂದ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಬಂಧನ

Leave a Reply