ರಾಜ್ಯದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ: ಡಾ.ಜಿ.ಪರಮೇಶ್ವರ್

12 months ago

ಮೈಸೂರು: ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಡಿದ ಅವರು, ರಾಜ್ಯದ ಪ್ರಮುಖ ನಗರಗಳು ಆಯಕಟ್ಟಿನ ಸ್ಥಳಗಳು ಪ್ರವಾಸಿ ತಾಣಗಳು ಮತ್ತು ಅತ್ಯಂತ ಜನನಿ ಬಿಡ ಪ್ರದೇಶಗಳಲ್ಲಿ ಹೆಚ್ಚು ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದರು.

ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಆದರೆ, ಉಗ್ರರ ದಾಳಿ ವಿಚಾರದಲ್ಲಿ ನಮ್ಮ ಗುಪ್ತಚರ ವ್ಯವಸ್ಥೆ ವಿಫಲವಾಗಿದೆ ಎಂದರು.

ಉಗ್ರರು ಸಾಕಷ್ಟು ಸಿದ್ಧತೆ ಮಾಡಿಕೊಂಡು, ಭಾರಿ ಶಸ್ತ್ರಾಸ್ತ್ರಗಳ ಸಮೇತ ದೇಶದ ಒಳಕ್ಕೆ ನುಗ್ಗಿದ್ದಾರೆ. ಇದೆಲ್ಲವನ್ನೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದು ದೇಶದ ಭದ್ರತೆಯ ವಿಚಾರ. ಇದರಲ್ಲಿ ಯಾರೂ ರಾಜಕೀಯ ಬೆರೆಸುವುದಿಲ್ಲ. ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಎಲ್ಲ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದು ನಮ್ಮ ಆಗ್ರಹ ಎಂದರು.

ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆಯುತ್ತಿರುವುದು ಒಳ್ಳೆಯ ಬೆಳವಣಿಗೆ. ಕೇಂದ್ರ ಸರ್ಕಾರ ಈಗಾಗಲೇ ರಾಜತಾಂತ್ರಿಕವಾಗಿ ಕೆಲವು ತೀರ್ಮಾನಗಳನ್ನು ಕೈಗೊಂಡಿದ್ದು, ಸರ್ವಪಕ್ಷ ಸಭೆಯಲ್ಲಿ ಇನ್ನಷ್ಟು ಸಲಹೆ ನೀಡಲಾಗುವುದು ಎಂದರು.

Leave a Reply