ಸಿದ್ದರಾಮಯ್ಯ ಪರ ಹೈಕಮಾಂಡ್ ನಿಲುವು: ಕಾನೂನು ಹೋರಾಟಕ್ಕೆ ಸೂಚನೆ

2 years ago

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಬಂದಿದ್ದರೂ ಅವರ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ.

ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕೆ ಸಿ ವೇಣುಗೋಪಾಲ್ ಯಾವುದೇ ಕಾರಣಕ್ಕೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಡಿ. ಕಾನೂನು ಸಮರ ಮುಂದುವರೆಸಿ ಎಂದು ಸಲಹೆ ಮಾಡಿದರು ಎಂದು ಮೂಲಗಳು ತಿಳಿದುಬಂದಿದೆ. ಈ ಮೂಲಕ ಸಿದ್ದರಾಮಯ್ಯ ಅವರ ಪರ ಹೈಕಮಾಂಡ್ ಅಚಲವಾಗಿ ನಿಂತಿದ್ದು ಸದ್ಯಕ್ಕೆ ನೀವು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂಬ ಸಂದೇಶ ರವಾನಿಸಿದೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿವೆ. ಜೊತೆಗೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಪಡುತ್ತಿವೆ. ಇದಕ್ಕಾಗಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ವಿಷಯದ ಬಗ್ಗೆ ರಾಜ್ಯದ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಹಾಗಾಗಿ  ನೀವು ಮುಖ್ಯಮಂತ್ರಿ ಆಗಿ ಮುಂದುವರೆಯಿರಿ ಎಂದು ಹೈಕಮಾಂಡ್ ನಾಯಕರು ಮುಖ್ಯಮಂತ್ರಿಗೆ ಅಭಯ ನೀಡಿದ್ದಾರೆ.

ಜೊತೆಗೆ ಸಿದ್ದರಾಮಯ್ಯ ಪರ ನಿಲ್ಲುವಂತೆ ಪಕ್ಷದ ಇತರೆ ಮುಖಂಡರಿಗೂ ಸಂದೇಶ ರವಾನಿಸಿದ್ದಾರೆ. ಪ್ರಕರಣದ ಬಗ್ಗೆ ಕಾನೂನಾತ್ಮಕ ಮತ್ತು ರಾಜಕೀಯ ಒಬ್ಬ ಹೋರಾಟ ನಡೆಸುವ ಜೊತೆಗೆ  ಉತ್ತಮ ಆಡಳಿತದತ್ತ ಗಮನಹರಿಸಿ ಎಂದು ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Leave a Reply