ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್

1 year ago

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಯಕರ ವಿರುದ್ಧ ಹೂಡಲಾಗಿದ್ದ ಮೊಕದ್ದಮೆಗಳನ್ನು ವಾಪಸ್ ಪಡೆದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ ಆಗಿದೆ.

ರೈತರು ದಲಿತ ಮತ್ತು ಕನ್ನಡಪರ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ ಇತರರ ವಿರುದ್ಧ ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದರು.

ಅಕ್ಟೋಬರ್ 15, 2024ರ ಸರ್ಕಾರಿ ಆದೇಶ ಸಿಆರ್ ಪಿಸಿ ಸೆಕ್ಷನ್ 321ರ ಉಲ್ಲಂಘನೆಯಾಗಿದೆ. ಈ ನಿಬಂಧನೆ ನಿರ್ದಿಷ್ಟವಾಗಿ ಪ್ರಾಸಿಕ್ಯೂಟರ್ ಮಾತ್ರ ಕಾನೂನು ಕ್ರಮದಿಂದ ಹಿಂದೆ ಸರಿಯಲು ಯಾವುದೇ ಕ್ರಮವನ್ನು ಪ್ರಾರಂಭಿಸುವ ಅಧಿಕಾರವನ್ನು ನೀಡುತ್ತದೆ. ಆದ್ದರಿಂದ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಪ್ರಾಸಿಕ್ಯೂಟರ್ ಗೆ ನಿರ್ದೇಶನ ನೀಡುವ ಅಧಿಕಾರ ರಾಜ್ಯ ಸಚಿವ ಸಂಪುಟಕ್ಕೆ ಇಲ್ಲ ಎಂದು ಅರ್ಜಿದಾರರು ಕೋರ್ಟ್ ಗಮನ ಸೆಳೆದಿದ್ದಾರೆ.

ಅಲ್ಲದೆ, ಈ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಯೋಗ್ಯವಲ್ಲ ಎಂದು ಹೇಳಿದ್ದ ಪೊಲೀಸ್ ಮತ್ತು ಪ್ರಾಸಿಕ್ಯೂಷನ್ ಇಲಾಖೆಗಳ ಅಭಿಪ್ರಾಯಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರ ಪ್ರಕರಣವನ್ನು ಹಿಂಪಡೆದು ಆದೇಶ ಹೊರಡಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ಹಿಂದೆ 2020ರಲ್ಲಿ ರಾಜ್ಯ ಸರ್ಕಾರ ಕ್ರಿಮಿನಲ್ ಪ್ರಕರಣಗಳನ್ನು ಹಿಂತೆಗೆದುಕೊಂಡ ಸಂದರ್ಭದಲ್ಲಿ, ಪ್ರಶ್ನಿಸಲಾದ ಅರ್ಜಿಗಳ ಕುರಿತಂತೆ  2022ರಲ್ಲಿ ತೀರ್ಪು ನೀಡಿದ ಹೈಕೋರ್ಟ್, ಮಾಜಿ ಮತ್ತು ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸುಪ್ರೀಂ ಕೋರ್ಟ್ ‍ನ ತೀರ್ಪಿನಿಂದ ನಿಯಂತ್ರಿಸಲ್ಪಡುತ್ತದೆ ಎಂದು ಸ್ಪಷ್ಟಪಡಿಸಿತ್ತು ಎಂದು ಅರ್ಜಿದಾರರು ಗಮನಸೆಳೆದಿದ್ದರು.

ಈ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ  ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ

ಏನಿದು ಪ್ರಕರಣ?: ಏಪ್ರಿಲ್ 16, 2022ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಜನರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು.

Leave a Reply