ಗೃಹ ಸಚಿವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು: ಕಾಂಗ್ರೆಸ್

1 year ago

ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ. ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಸಿ.ಟಿ. ರವಿಯನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು. ಈಗಾಗಲೇ ಬಂಧಿಸಿರುವ ಸಿ.ಟಿ. ರವಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಡೀ ಸಮಾಜದ ಮಹಿಳೆಯರು ಸಿ.ಟಿ.ರವಿ ಹೇಳಿಕೆ ಖಂಡಿಸಬೇಕು ಎಂದು ಆಗ್ರಹಿಸಿದರು.

Leave a Reply