ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ

3 years ago

#I #dont #like #calling #Sulluramaysha #HDKumaraswamy

ಬೆಂಗಳೂರು: ಮಾನ್ಯ Siddaramaiahರವರೇ; ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ ‘ರಾಮ’ರಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನೈಸ್ ರಸ್ತೆ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನಡೆಯುತ್ತಿರುವ ಆರೋಪ – ಪ್ರತ್ಯಾರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ತಾವು ‘ಸತ್ಯರಾಮಯ್ಯ’ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ ಎಂದಿದ್ದಾರೆ.

ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ಎಂದು ಹೇಳಿದ್ದಾರೆ.

ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ BJP Karnataka ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು ಎಂದು ಬಿಜೆಪಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ @siddaramaiah ನವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ ‘ನಿತ್ಯ ಕಿರುಕುಳ’ವನ್ನು ಮರೆಯಲಾದೀತೆ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ ‘ಅಪರ ಹರಿಶ್ಚಂದ್ರ’ನ ಸರಕಾರ! ಹೌದಲ್ಲವೇ? ಎಂದು ಕೇಳಿದ್ದಾರೆ.

ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್  ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. ‘ಸಿದ್ದನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ? ಎಂದಿದ್ದಾರೆ.

ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಸಲಹೆ ನೀಡಿದ್ದಾರೆ.

Leave a Reply