ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಕಷ್ಟ ಕೊಡಲು ಇಚ್ಚಿಸುವುದಿಲ್ಲ: ಡಿ ಕೆ ಶಿವಕುಮಾರ್

4 months ago

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎರಡೂವರೆ ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸುತ್ತಿದ್ದಂತೆ ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದು ಹಲವು ರೀತಿಯ ಚಟುವಟಿಕೆಯಲ್ಲಿ ನಿರತರಾಗಿದ್ದ ಡಿಸಿಎಂ ಡಿ ಕೆ ಶಿವಕುಮಾರ್ ಈಗ ಏಕಾಏಕಿ ತಮ್ಮ ನಿಲುವಿನಲ್ಲಿ ಹಠಾತ್ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತಂತೆ ಕೇಂದ್ರ ಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲು ದೆಹಲಿಗೆ ಆಗಮಿಸಿರುವ ಅವರು ಹೈಕಮಾಂಡ್ ನ ಕೆಲವು ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು ಪಕ್ಷದ ಕಾರ್ಯಕರ್ತನಾಗಿ ಕೆಲವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ ಎಂದು ತಿಳಿಸಿದರು.

ತಾವು ಯಾವುದೇ ಅಧಿಕಾರಕ್ಕಾಗಿ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರೆಯಲು ಬಯಸುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕಷ್ಟ ಕೊಡಲು ನಾನು ಬಯಸುವುದಿಲ್ಲ ಎಂದರು.

ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ಅವರು ನಿನ್ನೆಯಷ್ಟೇ ಅವರು ದೆಹಲಿಗೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡಿ ನನ್ನ ಬೇಡಿಕೆ ಸಲ್ಲಿಸಿ ಕಷ್ಟ ಕೊಡಲು ಇಚ್ಚಿಸುವುದಿಲ್ಲ ಎಂದರು.

ನಾಯಕತ್ವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ತಮ್ಮ ನಿಲುವು ತಿಳಿಸಿದ್ದಾರೆ. ವಿಧಾನಸಭೆಯಲ್ಲೂ ಕೂಡ ಸ್ಪಷ್ಟನೆ ನೀಡಿದ್ದಾರೆ. ಹೀಗಿರುವಲ್ಲಿ ಆ ವಿಚಾರದ ಬಗ್ಗೆ ಇನ್ನೂ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದರು.

ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಮತಗಳ್ಳತನ ಹೋರಾಟದ ಕುರಿತು ರಾಹುಲ್ ಗಾಂಧಿಯವರಿಗೆ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಸಿದ ಅವರು, ಮತಗಳ್ಳತನ ತಡೆಗಟ್ಟುವ ಕುರಿತಂತೆ ತಾವು ರಾಜಣ್ಣ ಅವರಲ್ಲಿ ತರಬೇತಿ ಪಡೆಯುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಜನವರಿ 25ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕುರಿತಂತೆ ಪ್ರತಿಕ್ರಿಯಿಸಿ ಅವರಿಗೆ ಒಳ್ಳೆಯದಾಗಲಿ ಎಂದರು.

Leave a Reply