ಜನರ ಆಶೀರ್ವಾದ ಇರುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ

5 months ago

ಚಾಮರಾಜನಗರ: ಸಂಪುಟ ಪುನರ್ ರಚನೆ ಮತ್ತು ಅಧಿಕಾರ ಹಸ್ತಾಂತರ ವಿಚಾರಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡುವರೆ ವರ್ಷಗಳ ಅವಧಿ ಪೂರ್ಣಗೊಳಿಸಿದೆ.

ಇದರ ನಡುವೆ ಜನರ ಆಶೀರ್ವಾದ ಇರುವವರೆಗೂ ತಾವೇ ಸಿಎಂ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಮತ್ತೊಂದೆಡೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಸಿಎಂ ಸಿದ್ದರಾಮಯ್ಯ ನಡೆದುಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಎಂಬ ವಿಷಯ ಇಲ್ಲಿಯವರೆಗೆ ಚರ್ಚೆ ಆಗಿರಲಿಲ್ಲ. ಯಾವಾಗ ಸಂಪುಟ ಪುನಾರಚನೆ ರಚನೆ ವಿಚಾರ ಚರ್ಚೆಗೆ ಬಂತೋ ಆಗಿನಿಂದ ಅಧಿಕಾರ ಹಸ್ತಾಂತರ ವಿಚಾರ ಚರ್ಚೆಯಾಗುತ್ತಿದೆ ಎಂದರು.

ಚಾಮರಾಜನಗರಕ್ಕೆ ಬಂದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ವಿಚಾರದ ಬಗ್ಗೆ ನನಗೆ ಯಾವುದೇ ನಂಬಿಕೆ ಇಲ್ಲ. ರಾಜ್ಯದ ಇತರೆ ಜಿಲ್ಲೆಗಳಿಗೆ ಭೇಟಿ ನೀಡಿದಂತೆ ಚಾಮರಾಜನಗರಕ್ಕೂ ಭೇಟಿ ನೀಡುತ್ತಿದ್ದೇನೆ. ಇಂತಹ ಮೂಢನಂಬಿಕೆಗಳ ಬಗ್ಗೆ ಚರ್ಚೆ ಅನಗತ್ಯ ಎಂದರು.

ಎಲ್ಲಿಯವರೆಗೆ ತಮಗೆ ಜನರ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೂ ರಾಜ್ಯದ ಸಿಎಂ ಆಗಿ ಮುಂದುವರೆಯುತ್ತೇನೆ. ಅಷ್ಟೇ ಅಲ್ಲ ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಮಾಡುತ್ತೇನೆ ಎಂದರು.

ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದರು.

Leave a Reply