ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

11 months ago

ಕಾರವಾರ: ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಅನಾವಶ್ಯವಾಗಿ ಸಮಯ ವ್ಯರ್ಥಮಾಡಿಸದೇ ಉಚಿತ ಬೇಸಿಗೆ ಶಿಬಿರಗಳಿಗೆ ಕಳುಹಿಸಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ. ಆ ಕ್ಷೇತ್ರದಲ್ಲಿ ನಿರಂತರವಾಗಿ ತರಬೇತಿ ಕೊಡಿಸಿ. ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹೇಳಿದರು.

ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ವಾರ್ಷಿಕ ಪರೀಕ್ಷೆ ನಂತರದ ಬೇಸಿಗೆ ರಜೆಯಲ್ಲಿ ಮಕ್ಕಳು ಮೂಬೈಲ್, ಟಿವಿ ಹಾಗೂ ಆಧುನಿಕ ತಂತ್ರಜ್ಞಾನದಲ್ಲಿ ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳು ಆಯೋಜನೆ ಮಾಡಿದ ಶಿಬಿರಗಳನ್ನು ಮಕ್ಕಳನ್ನು ಕಳುಹಿಸಿ ಅನ್ಯಾವಶ್ಯವಾಗಿ ಹಣವನ್ನು ವ್ಯರ್ಥಮಾಡುವ ಬದಲು ತಮ್ಮ ಮಕ್ಕಳನ್ನು ಇಂತಹ ಉಚಿತ ಶಿಬಿರಗಳಿಗೆ ಕಳುಹಿಸುವುದಲ್ಲದೇ ಅವರಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೆ ಆ ಕ್ಷೇತ್ರದ ತರಬೇತಿಗೆ ತಪ್ಪದೇ ಕಳುಹಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ.ಲಕ್ಷ್ಮೀದೇವಿ ಮಾತನಾಡಿ, ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಲ್ಲಿ ತಮ್ಮ ಕಲೆ, ಪ್ರತಿಭೆಯನ್ನು ಪ್ರದರ್ಶಿಸಿ ತಮ್ಮನ್ನು ಗುರುತಿಸಿಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್ ಮಾತನಾಡಿ, ಮಕ್ಕಳಲ್ಲಿನ ಸೂಕ್ತ ಪ್ರತಿಭೆಯನ್ನು ಅರಳಿಸಲು ಹಾಗೂ ಮಾನಸಿಕ ಶಕ್ತಿಯನ್ನು ಹೊರ ಹಾಕಲು ಇಂತಹ ಉಚಿತ ಶಿಬಿರಗಳ ಮೂಲಕ ಸಾಧ್ಯವಾಗಿದೆ. ಈ ಶಿಬಿರದಲ್ಲಿ ಮಕ್ಕಳು ಸಾಂಸ್ಕೃತಿಕ, ನೃತ್ಯ, ಚಿತ್ರಕಲೆ, ಕ್ರಾಫ್ಟ್ ಇತ್ಯಾದಿ ಚಟುವಟಿಕೆಗಳನ್ನು ಕಲಿತು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿ, ಇಲಾಖೆಯಿಂದ ಮುಂದಿನ ವರ್ಷ 1 ತಿಂಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲು ಪ್ರಯತ್ನಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನಲ್ ಐಗಲ್, ಕಲ್ಪನಾರಶ್ಮಿ, ಕಲಾ ಲೋಕದ ಅಧ್ಯಕ್ಷ ಸೂರ್ಯಪ್ರಕಾಶ ಮೊದಲಾದವರು ಹಾಜರಿದ್ದರು.

Leave a Reply