ಸಮೀಕ್ಷೆಗೆ ಹೋದವರಿಗೆ ತೊಂದರೆ ಮಾಡಿದರೆ, ವಿದ್ಯುತ್ ಮತ್ತು ನೀರಿನ ಸಂಪರ್ಕ ಕಡಿತ

11 months ago

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ  ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆ  ಅವಧಿ ವಿಸ್ತರಣೆ ಮಾಡಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಸದ್ಯ ನಡೆಯುತ್ತಿರುವ ಸಮೀಕ್ಷೆ ಶೇ 73ರಷ್ಟು ಪೂರ್ಣಗೊಂಡಿದೆ. ಸಮೀಕ್ಷೆ ಪೂರ್ಣಗೊಳ್ಳಲು ಇನ್ನೂ ಸಮಯ ಅವಕಾಶದ ಅಗತ್ಯವಿದೆ ಎಂದರು. 

ನಿಯಮಾನುಸಾರವಾಗಿ ಒಳ ಮೀಸಲಾತಿಯ ಪ್ರಮಾಣ ಘೋಷಣೆ ಮಾಡಬೇಕು. ಇದಕ್ಕಾಗಿ ಸಮೀಕ್ಷೆ ಪೂರ್ಣ ಪ್ರಮಾಣದಲ್ಲಿ ನಡೆಸಬೇಕು. ಈ ಹಿನ್ನೆಲೆಯಲ್ಲಿ ಹಲವು ಶಾಸಕರು, ಸಂಘಸಂಸ್ಥೆಗಳ ಮನವಿಯ ಮೇರೆಗೆ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದರು.

ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ದಿನಾಂಕವನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರವನ್ನು ಇದೇ 26 ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಇದೇ 28 ರವರೆಗೆ ವಿಸ್ತರಿಸಲಾಗಿದೆ ಎಂದರು.

ವಲಸೆ ಕಾರ್ಮಿಕರನ್ನು ವಿಶೇಷ ವರ್ಗ ಎಂದು ಪರಿಗಣಿಸಿ ಆಧಾರ್, ರೇಷನ್ ಕಾರ್ಡ್ ಅಥವಾ ಜಾತಿ ಪ್ರಮಾಣಪತ್ರವನ್ನು ನೀಡಿ ಇದೇ 19ರಿಂದ 25ರವರೆಗೆ ನಡೆಯುವ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶಗಳನ್ನು ಕಲ್ಪಿಸಲಾಗುವುದು ಎಂದರು.

ಅವರು ಯಾವ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೊ ಅದೇ ಪ್ರದೇಶಗಳಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಆಧಾರ್, ರೇಷನ್ ಕಾರ್ಡ್, ಜಾತಿ ಪ್ರಮಾಣಪತ್ರಗಳಿಲ್ಲದ ಅಲೆಮಾರಿ ಕುಟುಂಬಗಳನ್ನೂ ಸಮೀಕ್ಷೆಯಲ್ಲಿ ಸೇರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ36 ರಷ್ಟು ಮಾತ್ರ ಸಮೀಕ್ಷೆ ನಡೆದಿದೆ. ಅಪಾರ್ಟ್ ಮೆಂಟ್ ಗಳಲ್ಲಿ ಸಮೀಕ್ಷೆಗೆ ಹೋದವರಿಗೆ ತೊಂದರೆ ಮಾಡಿದರೆ, ವಿದ್ಯುತ್ ಮತ್ತು ನೀರಿನ ಸಂಪರ್ಕ ವನ್ನು ಕಡಿತ ಮಾಡಲಾಗುವುದು ಎಂದೂ ಎಚ್ಚರಿಕೆ ನೀಡಿದರು.

Leave a Reply